ಮಣಿಪಾಲ: ರೋಗಿಯನ್ನು ಆಸ್ಪತ್ರೆಗೆ ಕರೆದೊಯ್ದುತ್ತಿದ್ದ ಕಾರು ಬೆಂಕಿಗಾಹುತಿ!
ಉಡುಪಿ, ಎ.17: ರೋಗಿಯೊಬ್ಬರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಶುಕ್ರವಾರ ಬೆಳಗ್ಗೆ 9:30ರ ಸುಮಾರಿಗೆ ಮಣಿಪಾಲ ಟೈಗರ್ ಸರ್ಕಲ್ ಬಳಿ ನಡೆದಿದೆ.
ಉಡುಪಿ ನಗರದ ಗರಡಿ ರಸ್ತೆಯ ನಿವಾಸಿಯೊಬ್ಬರು ತಮ್ಮ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ರೋಗಿಯೊಬ್ಬರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಮಾರ್ಗ ಮಧ್ಯೆ ಕಾರಿನ ಇಂಜಿನ್ನಲ್ಲಿ ಸ್ಪಾರ್ಕ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿತ್ತೆನ್ನಲಾಗಿದೆ.
ಕೂಡಲೇ ಚಾಲಕ ಕಾರನ್ನು ರಸ್ತೆ ಬದಿ ನಿಲ್ಲಿಸಿ, ರೋಗಿಯನ್ನು ಹೊರಗಡೆ ಕರೆದುಕೊಂಡು ಬರುವಷ್ಟರಲ್ಲಿ ಬೆಂಕಿ ಕಾರನ್ನು ಆವರಿಸಿದೆ. ಬಳಿಕ ಕಾರು ಸಂಪೂರ್ಣ ಬೆಂಕಿಗೆ ಆಹುತಿಯಾಯಿತೆನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 2017 ಮಾಡೆಲ್ನ ಈ ಕಾರು ಸಂಪೂರ್ಣ ಸುಟ್ಟು ಹೋಗಿದ್ದು, ಸುಮಾರು ಏಳು ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.