ಸೈಂಟ್ ಮೇರಿಸ್ ದ್ವೀಪದಲ್ಲಿ ಪಾರ್ಟಿ: ಎಸಿಯಿಂದ ತನಿಖಾ ವರದಿ ಸಲ್ಲಿಕೆ
ಉಡುಪಿ, ಜೂ.1: ಕೋವಿಡ್- 19 ಲಾಕ್ಡೌನ್ ನಿಯಮ ಉಲ್ಲಂಘಿಸಿ ಮಲ್ಪೆ ಸೈಂಟ್ ಮೇರಿಸ್ ದ್ವೀಪದಲ್ಲಿ ಮೇ 9ರಂದು ತಡರಾತ್ರಿ ಮಲ್ಪೆ ಅಭಿವೃದ್ಧಿ ಸಮಿತಿಯ ನಿವಾರ್ಹಕ ಸಹಿತ ಏಳು ಮಂದಿ ಪಾರ್ಟಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ವರದಿಯನ್ನು ಕುಂದಾಪುರ ಸಹಾಯಕ ಆಯುಕ್ತ ರಾಜು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ಬಗ್ಗೆ ಖಚಿತ ಮೂಲಗಳು ತಿಳಿಸಿವೆ.
ಈ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಕರಾವಳಿ ಕಾವಲು ಪಡೆಯ ಪೊಲೀಸರು ಕಾರ್ಯಾಚರಣೆ ನಡೆಸಿ, ಮಲ್ಪೆ ಅಭಿವೃದ್ಧಿ ಸಮಿತಿಯ ನಿರ್ವಾಹಕ ಸುದೇಶ್ ಶೆಟ್ಟಿ ಸೇರಿದಂತೆ ಏಳು ಮಂದಿಯನ್ನು ವಿಚಾರಣೆ ನಡೆಸಿದ್ದು, ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸಮಿತಿಯ ಅಧ್ಯಕ್ಷರಾ ಗಿರುವ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಕರಾವಳಿ ಕಾವಲು ಪಡೆಯ ಎಸ್ಪಿ ಆರ್.ಚೇತನ್ ವರದಿ ಸಲ್ಲಿಸಿದ್ದರು.
ಈ ಬಗ್ಗೆ ಹೆಚ್ಚಿನ ತನಿಖೆ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಮೇ 10 ರಂದು ಕುಂದಾಪುರ ಎಸಿಗೆ ಆದೇಶ ನೀಡಿದ್ದರು. ಅದರಂತೆ ತನಿಖೆ ನಡೆಸಿದ ಎಸಿ, ವಾರದ ಹಿಂದೆ ಈ ಕುರಿತು ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ. ಅದರಲ್ಲಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದು ಕೊಳ್ಳುವಂತೆ ಶಿಫಾರಸ್ಸು ಮಾಡ ಲಾಗಿದೆ ಎಂದು ಮೂಲಗಳು ತಿಳಿಸಿವೆ.