ಕಿದಿಯೂರು ಘನ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಾಣಕ್ಕೆ ವಿರೋಧ
ಉಡುಪಿ, ಜೂ.2: ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಿದಿ ಯೂರು ಮಜ್ಜಿಗೆಪಾದೆ ಎಂಬಲ್ಲಿ ನಿರ್ಮಿಸಲು ಉದ್ದೇಶಿಸಿರುವ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಗ್ರಾಪಂ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿ ಸೇರಿದಂತೆ ಸ್ಥಳೀಯ ಸದಸ್ಯರೊಂದಿಗೆ ಶಾಸಕ ಕೆ.ರಘುಪತಿ ಭಟ್ ಮಂಗಳವಾರ ಸ್ಥಳಕ್ಕೆ ಭೇಟಿ ಸ್ಥಳೀಯ ನಿವಾಸಿಗಳೊಂದಿಗೆ ಚರ್ಚಿಸಿದರು. ಗ್ರಾಪಂ ಗುರುತಿಸಿರುವ ಈ ಜಾಗದಲ್ಲಿ ಯಾವುದೇ ಕಾರಣಕ್ಕೂ ಘನ ತ್ಯಾಜ್ಯ ನಿರ್ವಹಣಾ ಘಟಕ ನಿರ್ಮಿಸಲು ಅವಕಾಶ ನೀಡುವುದಿಲ್ಲ ಎಂದು ಸ್ಥಳೀಯರು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಈಗಾಗಲೇ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಈ ಜಾಗವನ್ನು ಮೀಸಲಿರಿಸಿ ಸರಕಾರ ದಾಖಲೆಯನ್ನು ತಯಾರಿಸಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಬೇರೆ ವ್ಯವಸ್ಥೆ ಮಾಡಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷ ದಿನಕರ ಬಾಬು, ತಾಪಂ ಸದಸ್ಯ ರಾಜೇಂದ್ರ ಪಂದುಬೆಟ್ಟು, ಸ್ಥಳೀಯ ಮುಖಂಡರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಅಂಬಲಪಾಡಿ ಗ್ರಾಪಂ ಅಧ್ಯಕ್ಷ ಪ್ರಮೋದ್ ಸಾಲ್ಯಾನ್, ಉಪಾಧ್ಯಕ್ಷೆ ಉಷಾ, ಸದಸ್ಯರಾದ ಸುಂದರ್ ಪೂಜಾರಿ, ನಾಗರಾಜ್ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತಿ ಮೊದಲಾದವರು ಉಪಸ್ಥಿತರಿದ್ದರು.