ಉಡುಪಿಯಲ್ಲಿ ಶೀಘ್ರವೇ ಸರಕಾರಿ ಕೋವಿಡ್ ಪರೀಕ್ಷಾ ಲ್ಯಾಬ್ : ಸಚಿವ ಡಾ.ಸುಧಾಕರ್
ಉಡುಪಿ, ಜೂ.3: ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಅತ್ಯಂತ ಶೀಘ್ರದಲ್ಲಿ ಸರಕಾರಿ ಕೋವಿಡ್-19 ಪರೀಕ್ಷಾ ಲ್ಯಾಬ್ ಆರಂಭಗೊಳ್ಳಲಿದ್ದು, ಈ ಕುರಿ ತಂತೆ ನೂತನ ಲ್ಯಾಬ್ ನಿರ್ಮಾಣ ಕಾಮಗಾರಿಗಳು ಅಂತಮ ಹಂತದಲ್ಲಿವೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ ಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.
ಬುಧವಾರ, ಮಣಿಪಾಲದಲ್ಲಿರುವ ಉಡುಪಿ ಜಿಪಂ ಸಭಾಂಗಣದಲ್ಲಿ ಕೋವಿಡ್-19 ಹಿನ್ನಲೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿ ಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಉಡುಪಿ ಜಿಲ್ಲೆಯಲ್ಲಿ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ನಾಗರಿಕರ ಕೋವಿಡ್ ಪರೀಕ್ಷೆ ಯನ್ನು ಶೀಘ್ರದಲ್ಲಿ ನಡೆಸುವ ಅಗತ್ಯವಿದ್ದು, ಈಗಾಗಲೇ ಮಣಿಪಾಲದ ಕೆಎಂಸಿಯಲ್ಲಿ ಇರುವ ಲ್ಯಾಬ್ನ ಜೊತೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ನೂತನ ಲ್ಯಾಬ್ನ ಸಿವಿಲ್ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿವೆ. ಅತಿಶೀಘ್ರದಲ್ಲಿ ಅಗತ್ಯ ಯಂತ್ರೋಪಕರಣಗಳನ್ನು ಒದಗಿಸುವುದಾಗಿ ತಿಳಿಸಿದ ಸಚಿವರು ಮುಂದಿನ 10 ದಿನದೊಳಗೆ ಈ ಲ್ಯಾಬ್ ಕಾರ್ಯಾರಂಭ ಮಾಡಲಿದೆ ಎಂದರು.
ಜಿಲ್ಲೆಗೆ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಬರುವವರನ್ನು ಸಾಂಸ್ಥಿಕ ಕ್ವಾರಂಟೈನ್ ಬದಲು ಅವರ ಮನೆಯನ್ನೇ ಸೀಲ್ ಡೌನ್ ಮಾಡಿ ಅಲ್ಲಿಗೆ ಅಗತ್ಯ ವಸ್ತುಗಳನ್ನು ಪೂರೈಸುವ ಕುರಿತಂತೆ ಜಿಲ್ಲೆಯ ಶಾಸಕರು ನೀಡಿದ ಸಲಹೆಯ ಕುರಿತಂತೆ ಪರಿಶೀಲಿಸುವುದಾಗಿ ತಿಳಿಸಿದ ಸಚಿವರು, ಕೋವಿಡ್ -19 ನಿಯಂತ್ರಣಕ್ಕೆ ಗ್ರಾಮಮಟ್ಟದಿಂದ ಜಿಲ್ಲಾ ಕೇಂದ್ರದಲ್ಲಿನ ವಾರ್ಡ್ಗಳ ವರೆಗೂ ಕಾರ್ಯಪಡೆ ರಚಿಸಿಕೊಂಡು ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.
ಕೋವಿಡ್-19ರ ಈ ಅವಧಿಯಲ್ಲಿ ಎಲ್ಲಾ ಖಾಸಗಿ ನರ್ಸಿಂಗ್ ಹೋಂ ಗಳು ಮತ್ತು ಕ್ಲಿನಿಕ್ಗಳು ಸಾರ್ವಜನಿಕರಿಗೆ ಅಗತ್ಯ ಸೇವೆ ನೀಡುತ್ತಿರುವ ಬಗ್ಗ ಪರಿಶೀಲಿ ಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಸಚಿವ ಡಾ. ಕೆ.ಸುಧಾಕರ್, ಜಿಲ್ಲೆಗೆ ಅಗತ್ಯವಿರುವ 2000 ಪಿಪಿಇ ಕಿಟ್ಗಳನ್ನು ಕೂಡಲೇ ಸರಬರಾಜು ಮಾಡಲಾಗುವುದು ಎಂದರು.
ಜಿಲ್ಲೆಯಲ್ಲಿ ಇದುವರೆಗೆ 13,542 ಜನರನ್ನು ಕ್ವಾರಂಟೈನ್ ಮಾಡಿದ್ದು, ಜಿಲ್ಲೆಗೆ ಮೇ ತಿಂಗಳಲ್ಲಿ 8624 ಮಂದಿ ಆಗಮಿಸಿದ್ದು, ಇದರಲ್ಲಿ 152 ಮಂದಿ ವಿದೇಶ ಗಳಿಂದ ಮತ್ತು 8472 ಮಂದಿ ಇತರೆ ರಾಜ್ಯಗಳಿಂದ ಆಗಮಿಸಿದ್ದು, ಇದರಲ್ಲಿ 7697 ಮಂದಿ ಮಹಾರಾಷ್ಟ್ರದಿಂದ ಬಂದಿದ್ದಾರೆ ಎಂದರು.
ಜಿಲ್ಲೆಯಲ್ಲಿ ಪ್ರತಿ ಒಂದು ಲಕ್ಷ ಜನಸಂಖ್ಯೆಗೆ 539 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಇದುವರೆಗೆ 12,504 ಮಾದರಿ ಸಂಗ್ರಹಿಸಲಾಗಿದೆ, ಒಟ್ಟು 410 ಪಾಸಿಟಿವ್ ಪ್ರಕರಣ ಕಂಡು ಬಂದಿದೆ. ಶೇ.98ರಷ್ಟು ಪ್ರಕರಣಗಳಲ್ಲಿ ಅಂದರೆ 400 ಮಂದಿಗೆ ರೋಗ ಲಕ್ಷಣಗಳಿಲ್ಲ . ಒಟ್ಟು 63 ಕಂಟೈನ್ ಮೆಂಟ್ ಝೋನ್ ರಚಿಸಲಾಗಿದ್ದು, ಪ್ರಸ್ತುತ 61 ಕಂಟೈನ್ಮೆಂಟ್ ಝೋನ್ಗಳಿವೆ ಎಂದು ಕೋವಿಡ್-19ರ ಜಿಲ್ಲಾ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್ ಮಾಹಿತಿ ನೀಡಿದರು.
ಸಭೆಯಲ್ಲಿ ಮುಜರಾಯಿ, ಬಂದರು ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಪಂ ಅಧ್ಯಕ್ಷ ದಿನಕರಬಾಬು, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುನೀಲ್ ಕುಮಾರ್, ರಘುಪತಿ ಭಟ್, ಸುಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಪ್ರೀತಿ ಗೆಹ್ಲೋಟ್, ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.