ಉಡುಪಿ: ಜಿಲ್ಲೆಯಲ್ಲಿ ರವಿವಾರ 41 ಮಂದಿಗೆ ಕೊರೋನ ಪಾಸಿಟಿವ್
ಉಡುಪಿ, ಜು.12: ರವಿವಾರ ಜಿಲ್ಲೆಯಲ್ಲಿ ಒಟ್ಟು 41 ಮಂದಿಗೆ ನೋವೆಲ್ ಕೊರೋನ ಸೋಮಕು ದೃಢಪಟ್ಟಿದೆ. ಅಲ್ಲದೇ 782 ಮಂದಿಯ ಗಂಟಲುದ್ರವ ಮಾದರಿ ನೆಗೆಟಿವ್ ಫಲಿತಾಂಶವನ್ನು ನೀಡಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ಚಂದ್ರ ಸೂಡ ತಿಳಿಸಿದ್ದಾರೆ.
ರವಿವಾರ ಪಾಸಿಟಿವ್ ಬಂದ 41 ಮಂದಿಯಲ್ಲಿ ಮಹಾರಾಷ್ಟ್ರದಿಂದ ಬಂದ ಇಬ್ಬರು, ಸೌದಿ ಅರೇಬಿಯಾದಿಂದ ಬಂದ ಒಬ್ಬರು, ಕರ್ನಾಟಕದ ಇತರೆ ಜಿಲ್ಲೆಗಳಿಂದ ಬಂದ ಆರು ಮಂದಿ ಇದ್ದು, ಉಳಿದ 32 ಮಂದಿ ಈಗಾಗಲೇ ಜಿಲ್ಲೆಯಲ್ಲಿ ಪಾಸಿಟಿವ್ ಬಂದವರ ಪ್ರಾಥಮಿಕ ಸಂಪರ್ಕಿತರಾಗಿದ್ದಾರೆ ಎಂದು ಡಾ.ಸೂಡ ತಿಳಿಸಿದರು.
ಸೋಂಕಿತರಲ್ಲಿ ಉಡುಪಿ ತಾಲೂಕಿನ 26 ಮಂದಿ, ಕುಂದಾಪುರ ತಾಲೂಕಿನ 11 ಮಂದಿ ಹಾಗೂ ಕಾರ್ಕಳ ತಾಲೂಕಿನ ನಾಲ್ವರು ಸೇರಿದ್ದಾರೆ. 26 ಮಂದಿ ಪುರುಷರು, 11 ಮಂದಿ ಮಹಿಳೆಯರು ಹಾಗೂ 10 ವರ್ಷದೊಳಗಿನ ಪ್ರಾಯದ ನಾಲ್ವರು ಮಕ್ಕಳು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ ಎಂದು ಡಿಎಚ್ಓ ತಿಳಿಸಿದರು. ರವಿವಾರ ಬಂದ 41 ಪಾಸಿಟಿವ್ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪತ್ತೆಯಾದವರ ಸಂಖ್ಯೆ 1608ಕ್ಕೇರಿದೆ.
28 ಮಂದಿ ಗುಣಮುಖ: ಜಿಲ್ಲೆಯಲ್ಲಿ ಸೋಂಕಿಗೆ ಚಿಕಿತ್ಸೆ ಪಡೆದು ಗುಣಮುಖರಾದ 28 ಮಂದಿ ಇಂದು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ 1273ಕ್ಕೇರಿದೆ. ಈಗಾಗಲೇ ಪಾಸಿಟಿವ್ ಬಂದ 332 ಮಂದಿ ಜಿಲ್ಲೆಯಲ್ಲಿ ಇನ್ನೂ ಕೊರೋನ ಸೋಂಕಿಗೆ ಚಿಕಿತ್ಸೆ ಪಡೆಯುತಿದ್ದಾರೆ.
649 ಸ್ಯಾಂಪಲ್ ಸಂಗ್ರಹ: ಸೋಂಕಿನ ಪರೀಕ್ಷೆಗಾಗಿ ರವಿವಾರ ಇನ್ನೂ 649 ಮಂದಿಯ ಗಂಟಲು ದ್ರವದ ಸ್ಯಾಂಪಲ್ಗಳನ್ನು ಪಡೆಯಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 115 ಮಂದಿ, ಕೋವಿಡ್ ಸಂಪರ್ಕಿತರು 141 ಮಂದಿ ಇದ್ದರೆ, ಶೀತಜ್ವರದಿಂದ ಬಳಲುವ 51 ಮಂದಿ ಹಾಗೂ ದೇಶ-ವಿದೇಶಗಳ ವಿವಿಧ ಕೋವಿಡ್ ಹಾಟ್ಸ್ಪಾಟ್ಗಳಿಂದ ಬಂದ 342 ಮಂದಿಯ ಸ್ಯಾಂಪಲ್ ಗಳು ಸೇರಿವೆ ಎಂದು ಡಾ.ಸೂಡ ತಿಳಿಸಿದರು.
ಇಂದು ಪಡೆದ ಸ್ಯಾಂಪಲ್ಗಳೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 22,327ಕ್ಕೇರಿದೆ. ಇವುಗಳಲ್ಲಿ ಈವರೆಗೆ 18,863 ನೆಗೆಟಿವ್, 1608 ಪಾಸಿಟಿವ್ ಬಂದಿವೆ. ಮೂವರು ಮೃತಪಟ್ಟಿದ್ದಾರೆ. ಇನ್ನು ಒಟ್ಟು 1856 ಸ್ಯಾಂಪಲ್ಗಳ ಪರೀಕ್ಷಾ ವರದಿ ಬರಬೇಕಿದೆ. ಇಂದು 22 ಮಂದಿ ಯನ್ನು ಐಸೋಲೇಷನ್ ವಾರ್ಡ್ಗೆ ದಾಖಲಿಸಲಾಗಿದೆ. ಇವರಲ್ಲಿ 10 ಮಂದಿ ಉಸಿರಾಟ ತೊಂದರೆಯವರು ಹಾಗೂ 12 ಮಂದಿ ಶೀತಜ್ವರದಿಂದ ಬಳಲುವವರು ಸೇರಿದ್ದಾರೆ ಎಂದರು.
ಜಿಲ್ಲೆಯ ಆಸ್ಪತ್ರೆಗಳ ಐಸೋಲೇಷನ್ ವಾರ್ಡ್ಗಳಿಂದ ಇಂದು 19 ಮಂದಿ ಬಿಡುಗಡೆಗೊಂಡಿದ್ದು, 140 ಮಂದಿ ಇನ್ನೂ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಇಂದು ಕೊರೋನ ಸೋಂಕಿನ ಗುಣಲಕ್ಷಣದ 19 ಮಂದಿ ಸೇರಿದಂತೆ ಒಟ್ಟು 6179 ಮಂದಿಯನ್ನು ಕೊರೋನ ತಪಾಸಣೆಗಾಗಿ ನೊಂದಾಯಿಸಿ ಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗ 1304 ಮಂದಿ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ ಎಂದು ಡಾ.ಸೂಡ ಹೇಳಿದರು.