ರಾಜ್ಯ ಸರಕಾರಕ್ಕೆ 1 ವರ್ಷ: ಮಂಗಳೂರಿನಲ್ಲಿ ಸಾಧನಾ ಪುಸ್ತಕ ಬಿಡುಗಡೆ
ಮಂಗಳೂರು, ಜು. 27: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದಲ್ಲಿ ನಡೆಯುತ್ತಿರುವ ನೇರ ಪ್ರಸಾರ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ವೀಕ್ಷಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸರಕಾರದ ಒಂದು ವರ್ಷದ ಸಾಧನೆಗಳ ಪುಸ್ತಕವನ್ನು ಈ ಸಂದರ್ಭ ಜಿಲ್ಲಾ ಮಟ್ಟದಲ್ಲಿಯೂ ಬಿಡುಗಡೆಗೊಳಿಸಲಾಯಿತು. ಆಯ್ದ ಜಿಲ್ಲೆಗಳ 10 ಮಂದಿ ಫಲಾನುಭವಿಗಳ ಜತೆಗಿನ ಸಂವಾದ ಸೇರಿದಂತೆ ವಿಧಾನ ಸೌಧದಲ್ಲಿ ನಡೆಯುತ್ತಿರುವ ಸಮಾರಂಭದ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸುವ ವ್ಯವಸ್ಥೆಯನ್ನು ನೇತ್ರಾವತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಂಗಳೂರು ಮೇಯರ್ ದಿವಾಕರ ಪಾಂಡೇಶ್ವರ, ದ.ಕ. ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಕಾರಿ ಡಾ. ಸೆಲ್ವಮಣಿ, ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಎಸಿ ಮದನ್ ಮೋಹನ್ ಮೊದಲಾದವರು ಉಪಸ್ಥಿತರಿದ್ದರು.
ಮುಂದಿನ ಅಧಿವೇಶನಕ್ಕೆ ಹೊಸ ಮೀನುಗಾರಿಕೆ ನೀತಿ ಸಿದ್ಧವಾಗಲಿದೆ. ಈಗಾಗಲೇ ಕರಡು ಸಿದ್ಧವಾಗಿದ್ದು ಆಕ್ಷೇಪಗಳನ್ನು ಸ್ವೀಕರಿಸಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದು ವಿಧಾನ ಮಂಡಲದಲ್ಲಿ ಮಂಡಿಸಲಾಗುವುದು. ಜುಲೈ 30 ರಂದು ವಿಧಾನಸೌಧದಲ್ಲಿ ವಿಶ್ವ ಮೀನುಗಾರಿಕೆ ದಿನಾಚರಣೆ ಆಚರಿಸಲಾಗುವುದು. ಇಲಾಖೆಯ ಸಾಧನೆ ಕುರಿತು ಪುಸ್ತಕ ಬಿಡುಗಡೆ ಮಾಡುತ್ತೇವೆ. ಮುನ್ನೋಟ ಬಗ್ಗೆ ಚರ್ಚೆ ನಡೆಯುತ್ತಿದೆ.
-ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ ಸಚಿವ