ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಯಾರೂ ಮಾಡದಿರಿ: ಎಸ್ಪಿ ಲಕ್ಷ್ಮೀ ಪ್ರಸಾದ್
ಮಂಗಳೂರು, ಜು.29: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ತೊಡಕಾಗುವಂತೆ ಯಾರೂ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು ಈ ಬಗ್ಗೆ ಜಿಲ್ಲೆಯ ಎಲ್ಲ ಕಡೆ ಸಾರ್ವಜನಿಕರಿಗೆ ಸೂಚನೆ ನೀಡಲಾಗುತ್ತಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಪೊಲೀಸರ ಗಮನಕ್ಕೆ ತರಬೇಕು. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ವಿವಿಧ ಕಡೆಗಳಲ್ಲಿ ಎಚ್ಚರಿಕೆ ನೀಡುವ ಕೆಲಸವನ್ನು ಪೊಲೀಸ್ ಇಲಾಖೆಯಿಂದ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಪತ್ರಿಕೆಗೆ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ವಾರದಿಂದ ಎಲ್ಲ ಕಡೆ ಸೆ.107 ಸಂಬಂಧಿಸಿದಂತೆ ಸಭೆಗಳನ್ನು ನಡೆಸಿ, ಎಚ್ಚರಿಕೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಯಾರೂ ಅಕ್ರಮವಾಗಿ ಗೋ ಸಾಗಾಟ ಮಾಡಬಾರದು. ಅಕ್ರಮ ಸಾಗಾಟ ಮಾಡುವವರ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಗೋ ಸಾಗಾಟ ಮಾಡುವವರನ್ನು ತಡೆದು ಹಲ್ಲೆ ನಡೆಸಲು ಯಾರಿಗೂ ಅವಕಾಶವಿಲ್ಲ. ಈ ಬಗ್ಗೆ ಎಲ್ಲ ಕಡೆ ಎಚ್ಚರಿಕೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಡೆಸಲಾಗುತ್ತಿರುವ ಸಭೆಗಳಲ್ಲಿ ಗೋಸಾಗಾಟ ಪ್ರಕರಣದ ಆರೋಪಿಗಳು ಭಾಗವಹಿಸುವ ಸಾಧ್ಯತೆ ಇದೆ. ಕಾನೂನು ಉಲ್ಲಂಘಿಸುವವರಿಗೆ ಮತ್ತು ಕಾನೂನು ಕೈ ಗೆತ್ತಿಕೊಳ್ಳುವವರಿಗೆ ಜಿಲ್ಲೆಯ ಶಾಂತಿ ಕದಡದಂತೆ, ಕಾನೂನು ಸುವ್ಯವಸ್ಥೆಗೆ ಅಡ್ಡಿ ಪಡಿಸದಂತೆ ಎಚ್ಚರಿಕೆ ನೀಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕೆಗೆ ತಿಳಿಸಿದ್ದಾರೆ.