ಪುತ್ತೂರು ಸರಕಾರಿ ಆಸ್ಪತ್ರೆಗೆ ಜಿ.ಪಂ. ಅಧ್ಯಕ್ಷೆ ಭೇಟಿ
ಪುತ್ತೂರು: ದ.ಕ. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರು ಬುಧವಾರ ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.
ಆಸ್ಪತ್ರೆಗೆ ಭೇಟಿ ನೀಡಿದ ಅಧ್ಯಕ್ಷರು ಎಲ್ಲ ವಿಭಾಗಗಳನ್ನು ಪರಿಶೀಲಿಸಿದರು. ನಿತ್ಯ ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸರಾಸರಿ ವಿವರ, ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿರುವವರ ವಿವರ, ಲಭ್ಯವಿರುವ ಔಷಧಗಳ ವಿವರ, ಮಕ್ಕಳ ವಿಭಾಗ, ಪ್ರಯೋಗಾಲಯ, ಹೆರಿಗೆ ವಿಬಾಗ, ಜನರಲ್ ಮೆಡಿಸಿನ್ ಇತ್ಯಾದಿಗಳ ಬಗ್ಗೆ ಮಾಹಿತಿ ಪಡೆದುಕೊಂಡ ಅವರು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಪ್ರದೀಪ್ರ ಜತೆ ಸಮಾಲೋಚನೆ ನಡೆಸಿದರು.
ಡೆಂಗ್ ಸೇರಿದಂತೆ ಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿಯನ್ನು ಪಡೆದರು. ಈ ಸಂದರ್ಭದಲ್ಲಿ ಆಸ್ಪತ್ರೆಗೆ ಬೇಕಾದ ಆವಶ್ಯಕತೆಗಳ ಬಗ್ಗೆ ಅಧಿಕಾರಿಗಳು ಬೇಡಿಕೆ ಸಲ್ಲಿಸಿದರು.
ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷೆ ಭವಾನಿ ಚಿದಾನಂದ್, ಜಿಲ್ಲಾ ಪಂಚಾಯತ್ ಸದಸ್ಯೆ ಶಯನಾ ಜಯಾನಂದ್, ತಾಲೂಕು ಪಂಚಾಯತ್ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಮುಕುಂದ ಗೌಡ, ಸದಸ್ಯರಾದ ಸಾಜ ರಾಧಾಕೃಷ್ಣ ಆಳ್ವ, ಹರೀಶ್ ಬಿಜತ್ರೆ, ಮೀನಾಕ್ಷಿ ಮಂಜುನಾಥ್, ಬಿಜೆಪಿ ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.