ಸಾಮಾಜಿಕ ಸುಧಾರಣೆಯ ಹರಿಕಾರ ಅರಸು: ಸಚಿವ ಪ್ರಮೋದ್
ಉಡುಪಿ, ಆ.20: ಅನ್ನ ನೀಡುವ ಭೂಮಿಯನ್ನು ಬಡವರಿಗೆ ಕೊಟ್ಟ ಸಾಮಾಜಿಕ ಸುಧಾರಣೆಯ ಹರಿಕಾರ ಅರಸು ಎಂದು ರಾಜ್ಯ ಮೀನುಗಾರಿಕೆ, ಯುವಜನ ಸೇವೆ ಹಾಗೂ ಕ್ರೀಡಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಉಡುಪಿ ಜಿಲ್ಲಾಡಳಿತ, ಜಿಪಂ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ ಹಾಗೂ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಬನ್ನಂಜೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಆಯೋಜಿಸ ಲಾದ ಮಾಜಿ ಮುಖ್ಯಮಂತ್ರಿ ದಿ.ಡಿ. ದೇವರಾಜ ಅರಸುರವರ ಜನ್ಮಶತಮಾನೋತ್ಸವ ಕಾರ್ಯ ಕ್ರಮಗಳ ಸಮಾರೋಪ ಸಮಾರಂಭ ಹಾಗೂ 101ನೆ ಜನ್ಮದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ರ್ಯಾಂಕ್ ಗಳಿಸಿದ ಎಸೆಸೆಲ್ಸಿ, ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ನಿವೃತ್ತ ಮೇಲ್ವಿಚಾರಕರಿಗೆ ಸನ್ಮಾನ, ಶಾದಿ ಮಹಲ್ ನಿರ್ಮಾಣಕ್ಕೆ 10 ಲಕ್ಷ ರೂ. ಸಹಾಯಧನ, ವಿವಿಧ ಶಾಲೆಗಳಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವನ್ನು ಈ ಸಂದರ್ಭ ವಿತರಿಸ ಲಾಯಿತು.
ಉಪನ್ಯಾಸಕ ಪ್ರೊ. ಸುರೇಂದ್ರನಾಥ ಶೆಟ್ಟಿ ವಿಶೇಷ ಉಪನ್ಯಾಸ ನೀಡಿದರು. ಭೂಮಸೂದೆಯ ಪ್ರಥಮ ಫಲಾನುಭವಿಗಳಾದ ಶ್ರೀದೇವಿ ಗೊಲ್ಲ ವಾರಂಬಳ್ಳಿ, ಮಂಜಪ್ಪ ಪೂಜಾರಿ, ನಾರಾಯಣ ಕನ್ನಯ್ಯ ಗೊಲ್ಲ ಬ್ರಹ್ಮಾವರ ಇವರನ್ನು ಸನ್ಮಾನಿಸಲಾಯಿತು.
ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸಿಇಒ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಅಪರ ಜಿಲ್ಲಾಧಿಕಾರಿ ಅನುರಾಧಾ, ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷೆ ವೆರೋನಿಕಾ ಕರ್ನೇಲಿಯೊ, ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಉಪಾಧ್ಯಕ್ಷ ರಾಜೇಂದ್ರ, ಉಡುಪಿ ತಹಶೀಲ್ದಾರ್ ಮಹೇಶ್ಚಂದ್ರ ಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಇಲಾಖೆಯ ಅಧಿಕಾರಿ ಹರೀಶ್ ಗಾಂವ್ಕರ್ ಸ್ವಾಗತಿಸಿದರು. ಇಲಾಖೆಯ ದಯಾನಂದ್ ಕಾರ್ಯಕ್ರಮ ನಿರೂಪಿಸಿದರು.