ಮುಲ್ಲರಪಟ್ಣ ಶರೀಫ್ ಮನೆಗೆ ಸಚಿವ ರೈ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ
ಬಂಟ್ವಾಳ, ಅ.28: ಮುಲ್ಲರಪಟ್ಣ ಮಾರ್ಗದಂಗಡಿ ಫಲ್ಗುಣಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕಾ ಅಡ್ಡೆ ಪೊಲೀಸರು ದಾಳಿ ನಡೆಸಿದ್ದ ಸಂದರ್ಭದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ನೀರಿನಲ್ಲಿ ಮುಳುಗಿ ಮೃತಪಟ್ಟ ಶರೀಫ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶುಕ್ರವಾಸ ಸಂಜೆ ಬೇಟಿ ನೀಡಿ ಮನೆ ಮಂದಿಗೆ ಸಾಂತ್ವನ ಹೇಳಿದರು.
ಶರೀಫ್ ಸಹೋದರ ಹಾಗೂ ಕುಟುಂಬಸ್ಥರೊಂದಿಗೆ ಕೆಲ ಹೊತ್ತು ಮಾತುಕತೆ ನಡೆಸಿ ಸಾಂತ್ವನ ಹೇಳಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮಾರ್ಗದಂಗಡಿಯಲ್ಲಿ ಬುಧವಾರ ನಡೆದ ಆಕಸ್ಮಿಕ ಘಟನೆೆ ನನಗೆ ತೀವ್ರ ನೋವುಂಟುಮಾಡಿದೆ ಎಂದು ಹೇಳಿದರು. ಘಟನೆ ಸಂಭವಿಸಿದ ದಿನ ನಾನು ಕ್ಯಾಬಿನೆಟ್ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿದ್ದೆ. ಇಲ್ಲಿದ್ದ ಪಕ್ಷದ ಮುಖಂಡರಿಂದ ಮಾಹಿತಿ ಲಭಿಸಿದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಜಿ. ಬೊರಸೆ, ಜಿಲ್ಲಾಧಿಕಾರಿ ಜಗದೀಶ್ರಿಗೆ ಕರೆ ಮಾಡಿ ಪ್ರಕರಣವನ್ನು ನಿರ್ಲಕ್ಷಿಸದೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಗಿಸುವಂತೆ ಸೂಚಿಸಿದ್ದೆ ಎಂದು ಅವರು ಹೇಳಿದರು.
ಊರಿಗೆ ಮರಳಿದ ಬಳಿಕ ಘಟನೆಯ ಬಗ್ಗೆ ಸಮಗ್ರ ಮಾಹಿತಿ ಪಡೆದಿದ್ದು ಮೃತ ಶರೀಫ್ ಕುಟುಂಬಕ್ಕೆ ನ್ಯಾಯೋಚಿತ ಪರಿಹಾರ ನೀಡಲು ಪ್ರಯತ್ನ ನಡೆಸಲಾಗುವುದು. ಪ್ರತ್ಯಕ್ಷದರ್ಶಿಗಳ ಹೇಳಿಕೆ ಪಡೆದು ಪ್ರಾಮಾಣಿಕ ತನಿಖೆ ನಡೆಸುವಂತೆ ಮತ್ತೊಮ್ಮೆ ಎಸ್ಪಿಹಾಗೂ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಜನರ ಭಾವನೆಗೆ ಪೂರಕವಾಗಿ ಕೆಲಸ ಮಾಡಲು ನಾನು ಬದ್ಧನಾಗಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಬಂಟ್ವಾಳ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಬಂಟ್ವಾಳ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ ಮೊದಲಾದವರು ಉಪಸ್ಥಿತರಿದ್ದರು.