ಎಚ್ಐವಿ ಸೋಂಕಿತರಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸಿ: ಜಿಲ್ಲಾಧಿಕಾರಿ
ಉಡುಪಿ, ನ.23: ಎಚ್ಐವಿ ಬಾಧಿತರಿಗೆ ಸರಕಾರದ ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಆದ್ಯತೆಯ ಮೇಲೆ ವಿತರಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಚ್ಐವಿ ಬಾಧಿತರಿಗೆ ಸಾಮಾಜಿಕ ಸವಲತ್ತುಗಳ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಜಿಲ್ಲೆಯಲ್ಲಿ 5 ಮಂದಿ ಎಚ್ಐವಿ ಬಾಧಿತರಿಗೆ ಅಂತ್ಯೋದಯ ಕಾರ್ಡ್, 164 ಮಂದಿಗೆ ವಸತಿ ಸೌಲ್ಯ, ಕಾನೂನು ಸೇವಾ ಪ್ರಾಧಿಕಾರದಿಂದ 51 ಮಂದಿಗೆ ನೆರವು, ವಿಧವಾ ಪಿಂಚಣಿ ಯೋಜನೆಯಡಿ 87 ಮಂದಿಗೆ ಪಿಂಚಣಿ ಸೌಲಭ್ಯ, 632 ಮಂದಿಗೆ ಬಸ್ ಪಾಸ್ಗಳನ್ನು ವಿತರಿಸಲಾಗಿದೆ. ಜಿಲ್ಲಾಧಿಕಾರಿ ಗಳ ನಿಧಿಯಿಂದ 247 ಮಂದಿಗೆ ಪೌಷ್ಠಿಕ ಆಹಾರ ವಿತರಣೆ ಮಾಡಲಾಗುತ್ತಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.
ಆರ್ಟಿಇ ಯೋಜನೆಯಡಿ ಎಚ್ಐವಿ ಬಾಧಿತ ಮಕ್ಕಳಿಗೆ ವಿಶೇಷ ಮೀಸಲಾತಿ ಸೌಲಭ್ಯವಿದ್ದು, ಇದನ್ನು ಉಪಯೋಗಿಸಿಕೊಳ್ಳುವಂತೆ ಹಾಗೂ ಬಸ್ಗಳಲ್ಲಿ ನೀಡಿರುವ ಪಾಸ್ನ್ನು ಯಾವುದೇ ಕಾರಣಕ್ಕೂ ನಿರಾಕರಿಸದೇ ರಿಯಾಯತಿ ದರದಲ್ಲಿ ಪ್ರಯಾಣ ಸೌಲಭ್ಯ ಕಲ್ಪಿಸುವಂತೆ ಬಸ್ ಮಾಲಕರಿಗೆ ಸೂಚಿಸುವಂತೆ ಆರ್ಟಿಒ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ನಿವೇಶನ ಮಂಜೂರು ಮಾಡುವ ಕುರಿತಂತೆ ಜಾಗ ಲಭ್ಯವಿರುವ ಗ್ರಾಪಂಗಳಲ್ಲಿ ಆದ್ಯತೆಯ ಮೇರೆಗೆ ನಿವೇಶನಗಳನ್ನು ಹಂಚುವಂತೆ ಹಾಗೂ ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರವನ್ನು ಯಾವುದೇ ದೂರುಗಳು ಬಾರದಂತೆ ವಿತರಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.
ಎಚ್ಐವಿ ಬಾಧಿತರಿಗೆ ಇಲಾಖೆಗಳಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ವಿತರಿಸುವ ಕುರಿತಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ವಿಶ್ವ ಏಡ್ಸ್ ದಿನಾಚರಣೆ
ಜಿಲ್ಲಾ ಮಟ್ಟದಲ್ಲಿ ಡಿ.1ರಂದು ವಿಶ್ವ ಏಡ್ಸ್ ದಿನಾಚರಣೆಯನ್ನು ಬಾರಕೂರಿನ ರುಕ್ಮಣಿ ಶೆಡ್ತಿ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.
ವಿಶ್ವ ಏಡ್ಸ್ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಜಿಲ್ಲೆಯ 54 ರೆಡ್ ರಿಬ್ಬನ್ ಕಾಲೇಜು ಸೇರಿದಂತೆ ಎಲ್ಲಾ ಕಾಲೇಜುಗಳಲ್ಲಿ ಜಾಥಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಏಡ್ಸ್ ಬಗ್ಗೆ ಅರಿವು ಮೂಡಿಸುವ ಯಕ್ಷಗಾನ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಏರ್ಪಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ ಅವರಿಗೆ ತಿಳಿಸಿದರು.
ಸಭೆಯಲ್ಲಿ ಏಡ್ಸ್ ನಿಯಂತ್ರಣದ ರಾಜ್ಯದ ನೋಡಲ್ ಅಧಿಕಾರಿ ಈಶ್ವರಯ್ಯ, ಡಿಎಚ್ಒ ಡಾ.ರೋಹಿಣಿ, ಡಿಡಿಪಿಐ ದಿವಾಕರ ಶೆಟ್ಟಿ, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಗೋನ್ಸಾಲ್ವಿಸ್ ಉಪಸ್ಥಿತರಿದ್ದರು.