ಎಚ್ಐವಿ ಪೀಡಿತರನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕು: ಮೀನಾಕ್ಷಿ ಶಾಂತಿಗೋಡು
ಮಂಗಳೂರಿನಲ್ಲಿ ವಿಶ್ವ ಏಡ್ಸ್ ದಿನ ಕಾರ್ಯಕ್ರಮ
ಮಂಗಳೂರು, ಡಿ.1: ಎಚ್ಐವಿ ಪೀಡಿತರನ್ನು ಸಮಾಜದಿಂದ ದೂರವಿಡದೆ ಅವರನ್ನು ಮುಖ್ಯವಾಹಿನಿಗೆ ತರುವ ಕೆಲಸವನ್ನು ಮಾಡಬೇಕು. ಏಡ್ಸ್ಗೆ ಕಾರಣವಾಗುವ ಅಂಶಗಳ ಬಗ್ಗೆ ಮಾಹಿತಿ ನೀಡಬೇಕಾಗಿದೆ. ಆ ಮೂಲಕ ಎಚ್ಐವಿ, ಏಡ್ಸ್ನ ಬಗ್ಗೆ ಜನಸಾಮಾನ್ಯರಿಗಿರುವ ತಪ್ಪು ಕಲ್ಪನೆಯನ್ನು ಹೋಗಲಾಡಿಸಲು ಜಾಗೃತಿ ಮೂಡಿಸುವ ಕೆಲಸವನ್ನು ಮಾಡುವ ಅಗತ್ಯವಿದೆ ಎಂದು ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹೇಳಿದರು.
ದ.ಕ. ಜಿಲ್ಲಾಡಳಿತ, ಜಿಪಂ ಮತ್ತಿತರ ಸಂಘಟನೆಗಳ ವತಿಯಿಂದ ನಗರದ ಹಂಪನಕಟ್ಟೆ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಗುರುವಾರ ನಡೆದ ‘ವಿಶ್ವ ಏಡ್ಸ್ ದಿನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಪಂನ ಆರೋಗ್ಯ ಶಿಕ್ಷಣ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಹುಲ್ ಹಮೀದ್ ಮಾತನಾಡಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ದ.ಕ. ಜಿಲ್ಲೆ ಮುಂದಿದೆ. ಎಚ್ಐವಿ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿರುವುದು ಸಮಾಧಾನಕರ ವಿಷಯ. ಈ ನಿಟ್ಟಿನಲ್ಲಿ ಎನೆಸ್ಸೆಸ್ ಮತ್ತಿತರ ಸಂಸ್ಥೆಗಳ ಪಾತ್ರ ಅಪಾರ ಎಂದರು.
ವಿವಿ ಕಾಲೇಜು ಪ್ರಾಂಶುಪಾಲ ಡಾ. ಉದಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಕುಮಾರ್, ವೆನ್ಲಾಕ್ ಆಸ್ಪತ್ರೆಯ ಡಾ. ಸಲ್ಡಾನ ಉಪಸ್ಥಿತರಿದ್ದರು. ಆರ್ಸಿಎಚ್ ಅಧಿಕಾರಿ ಡಾ. ಅಶೋಕ್, ಎದೆ ಮತ್ತು ಕ್ಷಯರೋಗಗಳ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಕಿಶೋರ್ಕುಮಾರ್ ಎಂ. ಉಪನ್ಯಾಸ ನೀಡಿದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಕಿಶೋರ್ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ ರಾವ್ ಪ್ರಾಸ್ತಾವಿಸಿದರು. ಡಾ. ಬದ್ರುದ್ದೀನ್ ಸ್ವಾಗತಿಸಿದರು.