ಕಾರು-ಬಸ್ಸು ಢಿಕ್ಕಿ: ಪಾದಚಾರಿಗೆ ಗಂಭೀರ ಗಾಯ
ಕಡಬ, ಜ.26: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಹಳೆ ಸ್ಟೇಷನ್ ಎಂಬಲ್ಲಿ ಕಾರೊಂದು ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆದು ನಂತರ ಕೆಎಸ್ಸಾರ್ಟಿಸಿ ಬಸ್ಸಿಗೆ ಗುದ್ದಿದ ಘಟನೆ ಗುರುವಾರ ನಡೆದಿದೆ. ಘಟನೆಯಲ್ಲಿ ಪಾದಚಾರಿಯೋರ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಕಡಬದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರಾಗಿರುವ ಮುಳಿಮಜಲು ನಿವಾಸಿ ಶಾಂತಪ್ಪಗೌಡ ಎಂಬವರ ಪುತ್ರ ರಮೇಶ್(20) ಎಂದು ಗುರುತಿಸಲಾಗಿದೆ. ಇವರು ನಡೆದುಕೊಂಡು ಹೋಗುತ್ತಿದ್ದಾಗ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ರಮೇಶ್ರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಕಾರು ಬಸ್ಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಕೂಡಾ ಸಂಪೂರ್ಣ ಜಖಂಗೊಂಡಿದೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story