ಅನಿವಾಸಿ ಭಾರತೀಯ ಕನ್ನಡಿಗರಿಗೆ ಕೇರಳ ಮಾದರಿಯ ಸಮಿತಿ ರಚನೆಗೆ ವರದಿ ಮಂಡನೆ: ಲೋಬೊ
ಮಂಗಳೂರು, ಫೆ.17: ರಾಜ್ಯದ ಅನಿವಾಸಿ ಭಾರತೀಯರ ಕಲ್ಯಾಣಕ್ಕಾಗಿ ಕೇರಳ ಮಾದರಿಯ ಸಮಿತಿ ರಚಿಸಬೇಕು ಎಂದು ರಾಜ್ಯ ವಿಧಾನ ಸಭೆಯಲ್ಲಿ ಮಂಡಿಸಲಾಗಿದೆ ಎಂದು ಕರ್ನಾಟಕ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಅಧ್ಯಕ್ಷ ಹಾಗೂ ಶಾಸಕ ಜೆ.ಆರ್. ಲೋಬೊ ಹೇಳಿದರು.
ಶುಕ್ರವಾರ ತನ್ನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅನಿವಾಸಿ ಭಾರತೀಯ ಕನ್ನಡಿಗರ ಕಲ್ಯಾಣದ ನಿಟ್ಟಿನಲ್ಲಿ ಕೇರಳ, ಗೋವಾ, ಆಂಧ್ರಪದೇಶದಲ್ಲಿ ಸಮಿತಿ ಅಧ್ಯಯನ ಮಾಡಿದೆ. ಅಂತಿಮವಾಗಿ ಕೇರಳ ಸರಕಾರವು ಅನಿವಾಸಿ ಭಾರತೀಯರ ಕಲ್ಯಾಣಕ್ಕಾಗಿ ಹಮ್ಮಿಕೊಂಡ ಸಾಕಷ್ಟು ಯೋಜನೆಗಳು ಸಮಿತಿಗೆ ತೃಪ್ತಿಯನ್ನುಂಟು ಮಾಡಿದೆ. ಅದನ್ನೇ ಆಧಾರವಾಗಿಟ್ಟುಕೊಂಡು ಸಮಿತಿಯು ವಿಧಾನಮಂಡಲದಲ್ಲಿ ತನ್ನ ವರದಿ ಒಪ್ಪಿಸಿದೆ. ಈ ಸಾಲಿನ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆ ಬಗ್ಗೆ ಘೋಷಣೆ ಮಾಡುವ ವಿಶ್ವಾಸವಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮೇಯರ್ ಹರಿನಾಥ್, ಸ್ಥಾಯಿ ಸಮಿತಿಯ ಅಧ್ಯಕ್ಷ ಲ್ಯಾನ್ಸ್ ಲಾಟ್ ಪಿಂಟೊ, ಕಾರ್ಪೊರೇಟರ್ ಪ್ರವೀಣ್ಚಂದ್ರ ಆಳ್ವ, ಕೆಎಸ್ಸಾರ್ಟಿಸಿ ನಿರ್ದೇಶಕ ಟಿ.ಕೆ.ಸುಧೀರ್ ಮತ್ತಿತರರು ಉಪಸ್ಥಿತರಿದ್ದರು.