ದ.ಕ.ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ
ಮಂಗಳೂರು, ಮಾ.11: ಐದು ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಶನಿವಾರ ಸಂಭ್ರಮ ಆಚರಿಸಿತು. ಜಿಲ್ಲೆಯ ವಿವಿಧೆಡೆಗಳಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ನಗರದ ಪಿವಿಎಸ್ ಜಂಕ್ಷನ್ ಬಳಿಯಿರುವ ಬಿಜೆಪಿ ಜಿಲ್ಲಾ ಕಾರ್ಯಾಲಯದ ಮುಂದೆ ವಿಜಯೋತ್ಸವ ನಡೆಯಿತು. ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಯೋಗೀಶ್ ಭಟ್, ಭಾರತದ ಜನತೆ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ಒಪ್ಪಿಕೊಂಡಿದೆ ಎಂಬುದಕ್ಕೆ ಈ ಲಿತಾಂಶ ಸಾಕ್ಷಿ. ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಮೋನಪ್ಪ ಭಂಡಾರಿ, ಬಿಜೆಪಿ ದಕ್ಷಿಣ ವಿಧಾನ ಸಭಾ ಕ್ಷೇತ್ರಾಧ್ಯಕ್ಷ ವೇದವ್ಯಾಸ ಕಾಮತ್ ಮಾತನಾಡಿದರು.
ಪಕ್ಷದ ಮುಖಂಡರಾದ ನಿತಿನ್ಕುಮಾರ್, ರವಿಶಂಕರ್ ಮಿಜಾರ್, ಕ್ಯಾ. ಬ್ರಿಜೇಶ್ ಚೌಟ, ಕಿಶೋರ್ ರೈ, ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು, ಜಿತೇಂದ್ರ ಕೊಟ್ಟಾರಿ, ರಮೇಶ್ ಕಂಡೆಟ್ಟು, ಡಾ. ಭರತ್ ಶೆಟ್ಟಿ, ವಿಕಾಸ್ ಪುತ್ತೂರು, ರಾಜೇಂದ್ರ ಮೊದಲಾದವರು ಉಪಸ್ಥಿತರಿದ್ದರು.