ಬೀದಿ ಬದಿ ವ್ಯಾಪಾರಸ್ಥರ ಮೇಲಿನ ದಾಳಿ ಖಂಡಿಸಿ ಪ್ರತಿಭಟನೆ
ಲಾಲ್ಬಾಗ್, ಮೇ 9: ಬೀದಿಬದಿ ವ್ಯಾಪಾರಸ್ಥರ ಮೇಲೆ ನಿರಂತರಾಗಿ ದಾಳಿ ನಡೆಸುವ ಮೂಲಕ ತೊಂದರೆ ನೀಡಲಾಗುತ್ತಿದೆ ಎಂದು ಆರೋಪಿಸಿ, ಪರ್ಯಾಯ ವ್ಯವಸ್ಥೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಆಗ್ರಹಿಸಿ ದ.ಕ. ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ವತಿಯಿಂದ ಇಂದು ಧರಣಿ ಸತ್ಯಾಗ್ರಹ ನಡೆಯಿತು.
ಮಂಗಳವಾರ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆಯನುದ್ದೇಶಿಸಿ ಸಿಐಟಿಯು ಜಿಲ್ಲಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಬೀದಿಬದಿ ವ್ಯಾಪಾರಸ್ಥರ ಹೋರಾಟದ ಫಲವಾಗಿ ಸಂಸತ್ತಿನಲ್ಲಿ ಮಸೂದೆ ಜಾರಿಗೊಂಡಿದೆ. ರಾಜ್ಯ ಸರಕಾರವು ಕೂಡ ವಿಶೇಷ ನಿಯಾಮಾವಳಿಗಳನ್ನು ರೂಪಿಸಿದ್ದರೂ ಸ್ಥಳೀಯಾಡಳಿತ ಇದ್ಯಾವುದರ ಬಗ್ಗೆಯೂ ಗಮನಹರಿಸದೆೆ ಬೀದಿ ಬದಿ ವ್ಯಾಪಾರಸ್ಥರ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದರು.
ಈ ಹಿಂದೆ ಮನಪಾದಿಂದ ಕೇವಲ 208 ಮಂದಿಗೆ ಗುರುತು ಚೀಟಿ ನೀಡಲಾಗಿದೆ. ಉಳಿದವರೆಗೆ ಈವರೆಗೆ ನೀಡಿಲ್ಲ. ಇದೀಗ ಗುರುತು ಚೀಟಿದಾರರ ಅವ ಮುಗಿದಿದ್ದರೂ ಮರುನೋಂದಾವಣೆ ಮಾಡಿಲ್ಲ. ಪರ್ಯಾಯ ವ್ಯವಸ್ಥೆಯ ಭಾಗವಾಗಿ ವೆಂಡಿಂಗ್ ಜೋನ್ ರಚನೆಗೊಂಡು ಉದ್ಘಾಟನೆಗೊಂಡರೂ ಅದಕ್ಕೆ ಸೂಕ್ತ ವ್ಯವಸ್ಥೆ ಮಾಡದೆ ದಾಳಿಯ ಮೂಲಕ ಬೀದಿ ಬದಿ ವ್ಯಾಪಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆಕ್ಷೇಪಿಸಿದರು.
ಪಾಲಿಕೆ ಬೀದಿ ಬದಿ ವ್ಯಾಪಾರಸ್ಥರ ಮೇಲೆ ನಡೆಸುತ್ತಿರುವ ದಾಳಿಯನ್ನು ತಕ್ಷಣ ನಿಲ್ಲಿಸಬೇಕು. ದ್ವಿತೀಯ ಹಂತದ ಗುರುತುಚೀಟಿಯನ್ನು ನೀಡಬೇಕು. ಪರ್ಯಾಯ ವ್ಯವಸ್ಥೆಗೆ ಕಟ್ಟುನಿಟ್ಟಿನ ಕ್ರಮ ಜರಗಿಸಬೇಕು ಎಂದು ಅವರು ಆಗ್ರಹಿಸಿದರು.
ಸುನೀಲ್ ಕುಮಾರ್ ಬಜಾಲ್, ಸಂಘದ ಅಧ್ಯಕ್ಷ ಮಹಮ್ಮದ್ ಮುಸ್ತಫ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಆರ್.ಎಸ್., ಖಂಜಾಜಿ ಎ.ಎಣ.ಅತ್ತಾವುಲ್ಲ ಮೊದಲಾದವರು ಉಪಸ್ಥಿತರಿದ್ದರು.