ಜೂ.16: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮ್ ಉಡುಪಿಗೆ
ಉಡುಪಿ, ಜೂ.10: ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರ ತನ್ನ ಮೂರು ವರ್ಷದ ಆಡಳಿತವನ್ನು ಪೂರ್ಣಗೊಳಿಸಿದ ಪ್ರಯುಕ್ತ ಉಡುಪಿ ಮತ್ತು ಚಿಕ್ಕಮಗಳೂರಿನಲ್ಲಿ ಹಮ್ಮಿಕೊಳ್ಳಲಾಗುವ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಏಕ್ ಭಾರತ್ ಶ್ರೇಷ್ಠ್ ಭಾರತ್ ಕಾರ್ಯಕ್ರಮದಲ್ಲಿ ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮ್ ಭಾಗವಹಿಸಲಿದ್ದಾರೆ.
ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ ಈ ವಿಷಯ ತಿಳಿಸಿದರು. ಜೂ.15ರಂದು ಚಿಕ್ಕಮಗಳೂರಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಚಿವರು, ಮರುದಿನ ಉಡುಪಿ ಜಿಲ್ಲೆಯಲ್ಲಿ ಆಯೋಜಿಸಲಾಗುವ ವಿವಿಧ ಕಾರ್ಯಕ್ರಮ ಗಳಲ್ಲಿ ಪಾಲ್ಗೊಳ್ಳುವರು ಎಂದರು.
ಜೂ.16ರಂದು ಬೆಳಗ್ಗೆ 8ಕ್ಕೆ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವ ನಿರ್ಮಲಾ ಸೀತಾರಾಮ್, 10:30ಕ್ಕೆ ಜಿಲ್ಲೆಯ ಕೈಗಾರಿಕೋದ್ಯಮಿಗಳು, ಚೇಂಬರ್ಸ್ನ ಸದಸ್ಯರು, ಲೆಕ್ಕ ಪರಿಶೋಧಕರೊಂದಿಗೆ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಆ ಬಳಿಕ 12:00ಕ್ಕೆ ಜ್ಯುವೆಲ್ಲರಿ ತರಬೇತಿ ಕೇಂದ್ರಕ್ಕೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವರು ಅಪರಾಹ್ನ 2:30ಕ್ಕೆ ಉಚ್ಚಿಲದ ಆಸುಪಾಸು ಸಮುದ್ರ ಕೊರೆತದ ಪ್ರದೇಶಗಳಿಗೆ ಭೇಟಿ ನೀಡಿ, 3:30ಕ್ಕೆ ಉಚ್ಚಿಲ ಮಹಾಲಕ್ಷ್ಮಿ ಸಭಾಭವನದಲ್ಲಿ ನಡೆಯುವ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.