ಹರ್ನಿಯಾ ಶಸ್ತ್ರಚಿಕಿತ್ಸೆ: ಮಠಕ್ಕೆ ಮರಳಿದ ಪೇಜಾವರ ಶ್ರೀ
ಉಡುಪಿ, ಆ.22: ಹರ್ನಿಯಾ ಶಸ್ತ್ರಚಿಕಿತ್ಸೆಯ ಬಳಿಕ ಎರಡು ದಿನಗಳ ಕಾಲ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ವೈದ್ಯರ ನಿಗಾದಲ್ಲಿದ್ದ ಪರ್ಯಾಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಇಂದು ಸಂಜೆ ಐದು ಗಂಟೆಯ ಸುಮಾರಿಗೆ ಶ್ರೀ ಕೃಷ್ಣಮಠಕ್ಕೆ ಮರಳಿದ್ದಾರೆ.
ಹಿರಿಯ ಸ್ವಾಮಿಯ ಅನುಪಸ್ಥಿತಿಯಲ್ಲಿ ನಿನ್ನೆ ಮೊದಲ ಬಾರಿ ಶ್ರೀ ಕೃಷ್ಣನಿಗೆ ಮಹಾಪೂಜೆ ನೆರವೇರಿಸಿದ್ದ ಪೇಜಾವರ ಮಠದ ಕಿರಿಯ ಯತಿಗಳಾದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀ ಇಂದು ಸಹ ಮಹಾಪೂಜೆ ಮಾಡಿದರು.
ಕಳೆದ ರವಿವಾರ ಹರ್ನಿಯಾ ಶಸ್ತ್ರಚಿಕಿತ್ಸೆಗೊಳಗಾದ ಪೇಜಾವರ ಶ್ರೀಗಳಿಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ, ಹೆಚ್ಚು ಮಾತನಾಡದಂತೆ ವೈದ್ಯರು ಸಲಹೆ ನೀಡಿದ್ದಾರೆ. ಆದರೆ ಸ್ವಾಮೀಜಿ ವಿಶ್ರಾಂತಿಯೊಂದಿಗೆ ತನ್ನ ದೈನಂದಿನ ಚಟುವಟಿಕೆಗಳನ್ನು ಮುಂದುವರಿಸಲಿದ್ದಾರೆ ಎಂದು ಸ್ವಾಮೀಜಿ ನಿಕಟವರ್ತಿಗಳು ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಸೋಮವಾರ ಪೇಜಾವರ ಶ್ರೀಗಳನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ್ದರು.