ಕಾಂಗ್ರೆಸ್: ಮನೆ ಮನೆಗೆ ಭೇಟಿ ಕಾರ್ಯಕ್ರಮಕ್ಕೆ ಚಾಲನೆ
ಮಂಗಳೂರು, ಸೆ. 23: ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿರುವ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಇಂದು ಬೆಳಗೆ ಮಂಗಳೂರಿನಲ್ಲಿ ಸಚಿವ ರಮಾನಾಥ ರೈ ಅವರು ಚಾಲನೆ ನೀಡಿದರು.
ಇನ್ನು ಕೆಲವೇ ತಿಂಗಳೊಳಗೆ ರಾಜ್ಯ ವಿಧಾನ ಸಭೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರದಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಪಕ್ಷಕ್ಕಾಗಿ ದುಡಿಯಲು ಕಾಂಗ್ರೆಸ್ ಕಾರ್ಯಕರ್ತರಿಗೆ ನಾಯಕರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್, ರಾಷ್ಟ್ರೀಯ ಮುಖಂಡ ವಿಷ್ಣುನಾಥ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ದಕ್ಷಿಣ ವಿಧಾನ ಸಭಾ ಕ್ಷೇತ್ರ ಶಾಸಕ ಜೆ.ಆರ್.ಲೋಬೋ, ರಾಜ್ಯ ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿ ಸೋಜ ಹಾಗೂ ಇತರರು ಉಪಸ್ಥಿತರಿದ್ದರು.
ಶಾಸಕ ಜೆ.ಆರ್.ಲೋಬೋ ಅವರ ಕಚೇರಿ ಬಳಿಯ ಶಿವಭಾಗ್ನಿಂದ ಆರಂಭಗೊಂಡ ಮನೆ ಮನೆಗೆ ಭೇಟಿ ನೀಡುವ ಈ ಕಾರ್ಯಕ್ರಮದಲ್ಲಿ, ಕಾಂಗ್ರೆಸ್ ಮುಖಂಡರು ನಗರದ ವಿವಿಧ ಕಡೆಗಳಿಗೆ ತೆರಳಿ ಕಾರ್ಯಕರ್ತರ ಸಾಧನೆಗಳನ್ನು ಮನೆ ಮನೆಗೆ ತಲುಪಿಸಲಿದ್ದಾರೆ.