ಜೆಡಿಎಸ್ನಿಂದ ಪ್ರಜ್ವಲ್ ರೇವಣ್ಣಗೆ ಟಿಕೆಟ್ ಇಲ್ಲ: ಕುಮಾರಸ್ವಾಮಿ
ಶಿವಮೊಗ್ಗ, ನ.9: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡುವುದಿಲ್ಲ ಎಂದು ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಗುರುವಾರ ಸ್ಪಷ್ಟಪಡಿಸಿದ್ದಾರೆ.
‘‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ನಾನು ಹಾಗೂ ರೇವಣ್ಣ ಇಬ್ಬರು ಮಾತ್ರ ಸ್ಪರ್ಧಿಸುತ್ತಿದ್ದೇವೆ. ಪ್ರಜ್ವಲ್ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ’’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಇತ್ತೀಚೆಗೆ ಹೇಳಿಕೆ ನೀಡಿದ್ದ ರೇವಣ್ಣರ ಪತ್ನಿ ಭವಾನಿ, ‘‘ತನ್ನ ಮಗ ಪ್ರಜ್ವಲ್ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಇನ್ನೂ ಖಚಿತವಾಗಿಲ್ಲ. ದೇವೇಗೌಡರಿಂದ ಗ್ರೀನ್ಸಿಗ್ನಲ್ ಸಿಗಬೇಕಾಗಿದೆ’’ ಎಂದು ಹೇಳಿದ್ದರು.
ಬೆಂಗಳೂರಿನಲ್ಲಿ ಬುಧವಾರ ಹೇಳಿಕೆ ನೀಡಿರುವ ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ, ‘‘ರೇವಣ್ಣನ ಪುತ್ರ ಪ್ರಜ್ವಲ್ಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಗ್ರೀನ್ ಇಲ್ಲವೇ ವೈಟ್ ಸಿಗ್ನಲ್ ನೀಡಲಾಗಿಲ್ಲ. ಪ್ರಜ್ವಲ್ ಹಾಗೂ ಕುಮಾರಸ್ವಾಮಿ ಪುತ್ರ ನಿಖಿಲ್ ರಾಜಕೀಯಕ್ಕೆ ಬರಬೇಕೇ, ಬೇಡವೇ ಎನ್ನುವುದನ್ನು ಜನರೇ ನಿರ್ಧರಿಸುತ್ತಾರೆ. ನಾನು ಪ್ರಧಾನಿಯಾಗುತ್ತೇನೆಂದು ಯೋಚಿಸಿಯೇ ಇರಲಿಲ್ಲ’’ಎಂದು ಹೇಳಿದ್ದರು.