ದಾನಮ್ಮ ಹತ್ಯೆಗೆ ಖಂಡನೆ : ವಿರಾಜಪೇಟೆಯಲ್ಲಿ ಪ್ರತಿಭಟನೆ
ಮಡಿಕೇರಿ,ಡಿ.27:ವಿಜಯಪುರದಲ್ಲಿ ಇತ್ತೀಚೆಗೆ ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಗೆಯ್ಯಲ್ಪಟ್ಟ ದಲಿತ ವಿದ್ಯಾರ್ಥಿನಿ ದಾನಮ್ಮಳ ಕುಟುಂಬಕ್ಕೆ ರೂ.50ಲಕ್ಷ ಪರಿಹಾರ ನೀಡಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ದಲಿತ ಸಂಘರ್ಷ ಸಮಿತಿ ಆಶ್ರಯದಲ್ಲಿ ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಯಿತು.
ನಗರದ ಗಡಿಯಾರ ಕಂಬದ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಸಂವಿಧಾನದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆಯವರ ವಿರುದ್ದ ಕ್ರಮ ಜರಗಿಸಬೇಕೆಂದೂ ಒತ್ತಾಯಿಸಿದರು. ಕೊಡಗು ಜಿಲ್ಲೆಯಲ್ಲಿಯೂ ದಲಿತ ಮಹಿಳೆಯರು ಮತ್ತು ಹೆಣ್ಣುಮಕ್ಕಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು ಈ ಬಗ್ಗೆ ಮಾನವ ಹಕ್ಕು ಆಯೋಗಕ್ಕೆ ಮನವಿ ಸಲ್ಲಿಸುವುದಾಗಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ಜಿಲ್ಲಾ ಕಾರ್ಯದರ್ಶಿ ಹೆಚ್.ಆರ್.ಪರಶುರಾಮ್ ಹೇಳಿದರು. ನಂತರ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.
ಸಿ.ಪಿ.ಐ. ಜಿಲ್ಲಾ ಕಾರ್ಯದರ್ಶಿ ರಮೇಶ್ ಮಾಯಮುಡಿ, ದ.ಸಂ.ಸಮಿತಿಯ ರಜನೀಕಾಂತ್, ಹೆಚ್.ಇ.ಶಿವಕುಮಾರ್, ಪಿ.ಜೆ.ಸುಬ್ರಮಣಿ, ಗಿರೀಶ್, ಸತೀಶ್ ಹಾಗೂ ಕುಮಾರ್ ಮಹಾದೇವ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.