ಬಿಜೆಪಿ ನನಗೆ ತಾಯಿ ಇದ್ದಂತೆ, ಅದನ್ನು ತೊರೆಯುವ ಪ್ರಶ್ನೆಯೇ ಇಲ್ಲ: ಮಾಜಿ ಸಚಿವ ರಾಮದಾಸ್ ಸ್ಪಷ್ಟನೆ
ಮೈಸೂರು,ಫೆ.3: ಬಿಜೆಪಿ ನನಗೆ ತಾಯಿ ಇದ್ದಂತೆ. ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ. ನನ್ನ ಕೊನೆ ಉಸಿರಿರುವವರೆಗೂ ಬಿಜೆಪಿಯಲ್ಲಿಯೇ ಇರುತ್ತೇನೆ ಎಂದು ಮಾಜಿ ಸಚಿವ ಎಸ್.ಎ.ರಾಮದಾಸ್ ಹೇಳಿದ್ದು, ಈ ಮೂಲಕ ತಾವು ಜೆಡಿಎಸ್ ಪಕ್ಷಕ್ಕೆ ಹೋಗುತ್ತೇನೆ ಎಂಬುದು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ನಿಷ್ಠಾವಂತ ಬಿಜೆಪಿ ಕಾರ್ಯಕರ್ತ. ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಕೆಲ ಮಾಧ್ಯಮಗಳು ಜೆಡಿಎಸ್ಗೆ ಹೋಗುವುದಾಗಿ ಸುದ್ದಿ ಪ್ರಕಟಿಸಿವೆ. ಈ ರೀತಿ ಸುಳ್ಳು ವದಂತಿ ಹಬ್ಬಿಸಿದರೆ ನೋಟಿಸ್ ನೀಡಿ ಅಪಪ್ರಚಾರ ಮಾಡುವವರ ವಿರುದ್ಧ ದೂರು ದಾಖಲಿಸಿ ಕಾನೂನಾತ್ಮಕ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನಾನು 25 ವರ್ಷಗಳಿಂದ ಬಿಜೆಪಿಯಲ್ಲಿದ್ದೇನೆ. ಬಿಜೆಪಿ ನನಗೆ ಎಲ್ಲವನ್ನೂ ನೀಡಿದೆ. ನಾನೇಕೆ ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗಲಿ ಎಂದು ಪ್ರಶ್ನೆ ಮಾಡಿದ ರಾಮದಾಸ್, ಕೆಲ ಮಾಧ್ಯಮಗಳಲ್ಲಿ ಬಂದಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು. ಪಕ್ಷ ನನಗೆ ತಾಯಿ ಇದ್ದಂತೆ. ತಾಯಿಗೆ ದ್ರೋಹ ಮಾಡುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದರೂ ಸಹ ನಾನು ಪಕ್ಷ ಬಿಡುವುದಿಲ್ಲ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಕೆ.ಆರ್.ಕ್ಷೇತ್ರದಲ್ಲಿ ಟಿಕೆಟ್ ಸಿಗಲಿ, ಬಿಡಲಿ ಬಿಜೆಪಿಯಲ್ಲೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನಗರಪಾಲಿಕೆ ಸದಸ್ಯ ಬಿ.ವಿ.ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.