ಮಂಡ್ಯ: ಪಕೋಡ ಮಾರುವ ಮೂಲಕ ಮೋದಿ ಹೇಳಿಕೆಗೆ ಖಂಡನೆ
ಮಂಡ್ಯ, ಫೆ.8: ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಖಂಡಿಸಿ ಜಿಲ್ಲಾ ಯುವ ಕಾಂಗ್ರೆ ನೇತೃತ್ವದಲ್ಲಿ ಗುರುವಾರ ನಗರದಲ್ಲಿ ಪಕೋಡ ಮಾರಾಟ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ನಗರದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಆವರಣದಲ್ಲಿ ಪರಿಕರಗಳ ಜತೆ ಜಮಾಯಿಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಪಕೋಡ ತಯಾರಿಸಿ ಮಾರಾಟ ಮಾಡಿ ಮೋದಿ, ಅಮಿತ್ಶಾ ವಿರುದ್ಧ ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಯುವಕರಿಗೆ ಉದ್ಯೋಗ ನೀಡುವುದಾಗಿ ಅಧಿಕಾರಕ್ಕೆ ಬಂದ ನರೇಂದ್ರಮೋದಿ, ಉದ್ಯೋಗ ನೀಡದೆ ಪಕೋಡ ಮಾರಾಟವು ಉದ್ಯೋಗವೆಂದು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ವಿಫಲವಾಗಿದೆ. ವಿದೇಶಿ ಬ್ಯಾಂಕ್ನ ಕಪ್ಪುಹಣ ತಂದು ತಲಾ 15 ಲಕ್ಷ ರೂ. ನೀಡುವುದಾಗಿ ಹೇಳಿ ಒಂದು ನಯಾಪೈಸೆ ತಂದಿಲ್ಲ ಎಂದು ವ್ಯಂಗ್ಯವಾಡಿದರು.
ಪೆಟ್ರೋಲ್, ಡೀಸಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಗಗನಕ್ಕೇರಿದೆ. ನೋಟು ಅಮಾನ್ಯೀಕರಣದಿಂದ ದೇಶದ ಅಭಿವೃದ್ಧಿ ಕುಂಠಿತಗೊಂಡಿದೆ. ಜಿಎಸ್ಟಿಯಿಂದ ಜನಸಾಮಾನ್ಯರ ಬದುಕಿಗೆ ಬರೆ ಎಳೆಯಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಯುವ ಘಟಕದ ಅಧ್ಯಕ್ಷ ಲೋಕೇಶ್ಗೌಡ, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ರಫಿವುಲ್ಲಾ, ಪ್ರಧಾನ ಕಾರ್ಯದರ್ಶಿ ಜಬೀವುಲ್ಲಾ, ಎಪಿಎಂಸಿ ಅಧ್ಯಕ್ಷೆ ಪಲ್ಲವಿ, ನಟರಾಜು, ಸಿದ್ದರಾಜು, ಶಾರದ ರಮೇಶ್ರಾಜು, ಗುರು, ಇತರರು ಪಾಲ್ಗೊಂಡಿದ್ದರು.