ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ನಾಲಾಯಕ್ ರಾಜಕಾರಣಿ : ಸಿದ್ದರಾಮಯ್ಯ
ಬಳ್ಳಾರಿ (ಹೊಸಪೇಟೆ), ಫೆ.10: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಒಬ್ಬ ನಾಲಾಯಕ್ ರಾಜಕಾರಣಿ. ಗ್ರಾ.ಪಂ. ಅಧ್ಯಕ್ಷನಾಗಲೂ ಅವರು ಅರ್ಹರಲ್ಲ. ಅವರು ಸಂವಿಧಾನ ಬದಲಾಯಿಸಲು ಬಂದಿದ್ದೇವೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾರಿಗೆ ಗೊತ್ತಿಲ್ಲದೆ ಅನಂತ್ ಕುಮಾರ್ ಈ ಹೇಳಿಕೆ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶನಿವಾರ ಬಳ್ಳಾರಿಯ ಹೊಸಪೇಟೆಯಲ್ಲಿ ಕೆಪಿಸಿಸಿ ಆಯೋಜಿದ್ದ ಜನಾಶೀರ್ವಾದ ಯಾತ್ರೆಗೆ ಚಾಲನೆ ಹಾಗೂ ಬಿಜೆಪಿ ಶಾಸಕ ಅನಂದ ಸಿಂಗ್, ನಾಗೇಂದ್ರ ಅವರನ್ನು ಕಾಂಗ್ರೆಸ್ ಗೆ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಹಾದಾಯಿ ನದಿ ನೀರು ಹಂಚಿಕೆ ಸಂಬಂಧ ಉತ್ತರ ಕರ್ನಾಟಕ ಭಾಗದ ರೈತರು ಎರಡು ವರ್ಷಗಳಿಂದಲೂ ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ, ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಮಾತನಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಫೆ.14ಕ್ಕೆ ನಾಲ್ಕು ವರ್ಷ 9 ತಿಂಗಳು ಪೂರೈಸುತ್ತೆ. ನಮ್ಮ ನಿರೀಕ್ಷೆಗೆ ತಕ್ಕಂತೆ ಜನಪರ ಆಡಳಿತ ಕೊಟ್ಟಿದ್ದೇವೆ. ಜನರಿಗೆ ಕೊಟ್ಟಿದ್ದ ಭರವಸೆ ಈಡೇರಿಸಿದ್ದೇವೆ.ರಾಜ್ಯದ ಇತಿಹಾಸದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರ ಇದ್ದರೆ, ಅದು ನಮ್ಮ ಸರ್ಕಾರ ಎಂದು ಹೆಮ್ಮೆಯಿಂದ ಹೇಳುತ್ತೇನೆ ಎಂದರು.
‘ಅನ್ನಭಾಗ್ಯ, ಕೃಷಿ, ಮೈತ್ರಿ ಆರೋಗ್ಯ ಭಾಗ್ಯ ಇಂದಿರಾ ಕ್ಯಾಂಟೀನ್ ಸೇರಿದಂತೆ ಹಲವು ಭಾಗ್ಯ ನೀಡಿದ್ದೇವೆ. ಎಲ್ಲ ಕಾರ್ಯಕ್ರಮ ಒಂದು ಜಾತಿಗೆ ಸೀಮಿತವಾಗಿಲ್ಲ ಎಂದರು.
ನವ ಕರ್ನಾಟಕ ನಿರ್ಮಾಣಕ್ಕೆ ನಮ್ಮ ಕಾರ್ಯಕ್ರಮದ ಮೂಲಕ ಭವಿಷ್ಯ ಬರೆದಿದ್ದೇವೆ. ಇವತ್ತು ಕರ್ನಾಟಕ ಅಭಿವೃದ್ಧಿ ಪಥದಲ್ಲಿ ನಡೆಯುತ್ತಿದೆ. ಇದು ಮುಂದುವರಿಯಬೇಕಾದರೆ ನವ ಕರ್ನಾಟಕ ನಿರ್ಮಾಣಕ್ಕೆ ಮತ್ತೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲೇ ಬೇಕು ಎಂದು ಸಿದ್ದರಾಮಯ್ಯ ಹೇಳಿದರು.