ಮೈಸೂರು: ಭಾರತ್ ನಗರಕ್ಕೆ ಭೇಟಿ ನೀಡಿ ಕಾಲ್ನಡಿಗೆಯಲ್ಲೇ ಕಾಲೋನಿ ಸುತ್ತಿದ ಸಿಎಂ
ಮೈಸೂರು,ಫೆ.19: ಮೈಸೂರಿನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಮಹದೇವಪುರ ಮುಖ್ಯ ರಸ್ತೆಯಲ್ಲಿರುವ ಭಾರತ್ ನಗರಕ್ಕೆ ದಿಢೀರ್ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅನಿರೀಕ್ಷಿತ ಆಗಮನದಿಂದ ಅಚ್ಚರಿಗೊಳಗಾದ ಭಾರತ್ ನಗರದ ನಿವಾಸಿಗಳು ಸಂತಸದಿಂದ ಜಯಘೋಷ ಕೂಗಿದರು.
ಇದೇ ವೇಳೆ ಸ್ಥಳೀಯ ನಿವಾಸಿಗಳ ಅಳಲುಗಳನ್ನು ಆಲಿಸಿ, ಇಡೀ ಕಾಲೋನಿಯನ್ನು ಕಾಲ್ನಡಿಗೆಯಲ್ಲಿ ಸುತ್ತಿದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ವರುಣಾ ವಿಧಾನಸಭೆ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ. ಯತೀಂದ್ರ, ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗಿದ್ದರು.
ನಂತರ ಮೈಸೂರಿನಲ್ಲಿ ನಿರ್ಮಾಣಗೊಂಡಿರುವ ಜಿಲ್ಲಾಧಿಕಾರಿಗಳ ನೂತನ ಕಚೇರಿಯ ಸಂಕೀರ್ಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯರವರು ವೀಕ್ಷಿಸಿದರು.
ಮೈಸೂರಿನ ಸಿದ್ಧಾರ್ಥ ನಗರದಲ್ಲಿ ನಿರ್ಮಾಣವಾಗಿರುವ ಜಿಲ್ಲಾಧಿಕಾರಿಗಳ ಕಚೇರಿ ಇದೇ ತಿಂಗಳು 28 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಈ ಸಂದರ್ಭ ಮಾತನಾಡಿದ ಅವರು ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಅದ್ಭುತವಾಗಿ ಮೂಡಿ ಬಂದಿದೆ. ನೋಡೋದಕ್ಕೂ ತುಂಬಾ ಚೆನ್ನಾಗಿದೆಯಲ್ರೀ ಎಂದು ಸಂತಸ ವ್ಯಕ್ತಪಡಿಸಿದರು. ಈ ವೇಳೆ ಸಚಿವ ಡಾ.ಎಚ್.ಸಿ.ಮಹೇವಪ್ಪ, ಜಿಲ್ಲಾಧಿಕಾರಿ ಡಿ.ರಂದೀಪ್ ಉಪಸ್ಥಿತರಿದ್ದರು.