ದಾವಣಗೆರೆ: ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿ ಮೃತ್ಯು
ವೈದ್ಯರ ನಿರ್ಲಕ್ಷ್ಯದ ಆರೋಪ
ದಾವಣಗೆರೆ,ಜೂ.03: ಚಿಕಿತ್ಸೆ ಫಲಕಾರಿಯಾಗದೇ ಬಾಣಂತಿಯೊಬ್ಬರು ಮೃತ ಪಟ್ಟಿರುವ ಘಟನೆ ನಗರದ ಜಿಲ್ಲಾ ಚಿಗಟೇರಿ ಸಾರ್ವಜನಿಕರ ಆಸ್ಪತ್ರೆಯಲ್ಲಿ ಭಾನುವಾರ ನಡೆದಿದ್ದು, ಮೃತಳ ಸಂಬಂಧಿಕರು ಈ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿದ್ದಾರೆ.
ಇಲ್ಲಿನ ಶ್ರೀರಾಮ ನಗರದ ನಿವಾಸಿ ಜ್ಯೋತಿ(26) ಎಂಬವರೇ ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿರುವ ಮಹಿಳೆಯಾಗಿದ್ದು, ಈಕೆ ಕಳೆದ ಮೂರು ದಿನಗಳಿಂದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ತಿಂಗಳ ಹಿಂದೆ ಇದೇ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ಈಕೆ, ನಂತರ ರಕ್ತಹೀನತೆಯಿಂದ ಬಳಲಿದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು.
ಜ್ಯೋತಿ ಸಾವಿನ ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಯ ಆವರಣದಲ್ಲಿ ಜಮಾಯಿಸಿದ್ದ ಮೃತಳ ಸಂಬಂಧಿಕರ ಆರ್ತನಾದ ಮುಗಿಲು ಮುಟ್ಟಿತ್ತು. ಜ್ಯೋತಿ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣವಾಗಿದೆ, ಚಿಕಿತ್ಸೆಗೆ ದಾಖಲಾಗಿದ್ದ ದಿನದಿಂದ ಸರಿಯಾದ ಚಿಕಿತ್ಸೆಯನ್ನೇ ನೀಡಿಲ್ಲ ಎಂದು ಆರೋಪಿಸಿದ ಮೃತಳ ಸಂಬಂಧಿಕರು ಜ್ಯೋತಿಯ ಸಾವಿಗೆ ಕಾರಣರಾದ ವೈದ್ಯರು ಹಾಗೂ ವೈದ್ಯ ಸಿಬ್ಬಂದಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಂಡು, ನೊಂದಿರುವ ನಮಗೆ ನ್ಯಾಯಕೊಡಿಸಬೇಕೆಂದು ಆಗ್ರಹಿಸಿದ್ದಾರೆ.