ಖಾತೆ ಹಂಚಿಕೆ ವಿಚಾರದಲ್ಲಿ ಗೊಂದಲವಿಲ್ಲ: ಜಿ.ಟಿ.ದೇವೇಗೌಡ
ಬೆಂಗಳೂರು, ಜೂ.5: ಲೋಕೋಪಯೋಗಿ ಹಾಗೂ ಇಂಧನ ಖಾತೆ ಹಂಚಿಕೆ ವಿಚಾರದಲ್ಲಿ ನನ್ನ ಹಾಗೂ ಎಚ್.ಡಿ.ರೇವಣ್ಣ ನಡುವೆ ಯಾವುದೆ ಸಂಘರ್ಷವಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಸ್ಪಷ್ಟಣೆ ನೀಡಿದ್ದಾರೆ.
ಮಂಗಳವಾರ ಮುಖ್ಯಮಂತ್ರಿಯ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು 37 ಜನ ಶಾಸಕರು ಗೆದ್ದಿದ್ದೇವೆ. ನಮ್ಮ ಪಕ್ಷಕ್ಕೆ 11 ಸಚಿವ ಸ್ಥಾನ ಹಂಚಿಕೆಯಾಗಿದೆ. ಈ ಪೈಕಿ ಒಂದು ಸ್ಥಾನವನ್ನು ಬಿಎಸ್ಪಿಗೆ ನೀಡಲು ನಿರ್ಧರಿಸಲಾಗಿದೆ ಎಂದರು.
ಇನ್ನುಳಿದ 10 ಸ್ಥಾನಗಳಿಗಾಗಿ ಯಾರೂ ಲಾಬಿ ಮಾಡುತ್ತಿಲ್ಲ. ಯಾರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕು, ಯಾವ ಭಾಗ, ಯಾವ ಸಮಾಜಕ್ಕೆ ಆದ್ಯತೆ ನೀಡಬೇಕು ಎಂಬುದರ ಕುರಿತು ನಿರ್ಧರಿಸುವ ಅಧಿಕಾರವನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ನಮ್ಮ ನಾಯಕ ಎಚ್.ಡಿ.ಕುಮಾರಸ್ವಾಮಿಗೆ ಬಿಟ್ಟಿದ್ದೇವೆ ಎಂದು ಜಿ.ಟಿ.ದೇವೇಗೌಡ ಹೇಳಿದರು.
Next Story