35 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸ್ವಯಂ ಪ್ರೇರಿತ ಕೋರ್ಸ್ಗಳ ಸ್ಥಗಿತ
ಬೆಂಗಳೂರು, ಜೂ.11: ರಾಜ್ಯದ ಕೆಲ ಶಿಕ್ಷಣ ಸಂಸ್ಥೆಗಳ ಪರಿಸ್ಥಿತಿ ಅತ್ಯಂತ ಕೆಟ್ಟದಾಗಿದೆ. ಹೀಗಾಗಿ ರಾಜ್ಯದ 35ಕ್ಕೂ ಅಧಿಕ ಎಂಜಿನಿಯರಿಂಗ್ ಕಾಲೇಜುಗಳು ಸ್ವಯಂಪ್ರೇರಿತವಾಗಿ 75 ಕೋರ್ಸ್ಗಳನ್ನು ಸ್ಥಗಿತಗೊಳಿಸಲು ಮುಂದಾಗಿವೆ ಎಂದು ತಿಳಿದುಬಂದಿದೆ.
ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ನೀಡಿರುವ ಮಾಹಿತಿಗಳ ಪ್ರಕಾರ, ಬೆಂಗಳೂರಿನ ಆರ್ವಿ ಎಂಜಿನಿಯರಿಂಗ್ ಕಾಲೇಜು ಮತ್ತು ಬಿಎಂಎಸ್ ಎಂಜಿನಿಯರ್ ಕಾಲೇಜು ಸೇರಿದಂತೆ 35ಕ್ಕೂ ಅಧಿಕ ಕಾಲೇಜುಗಳು 75 ಎಂಜಿನಿಯರಿಂಗ್ ಕೋರ್ಸ್ಗಳ ಸ್ಥಗಿತ ಮಾಡಲು ಅನುಮತಿ ನೀಡುವಂತೆ ಮನವಿ ಮಾಡಿಕೊಂಡಿದ್ದವು. ಈ ಮನವಿಗೆ ಇದೀಗ ಎಐಸಿಟಿಇ ಅನುಮತಿ ನೀಡಿದೆ ಎಂದು ಹೇಳಲಾಗುತ್ತಿದೆ.
ಕಾಲೇಜುಗಳು ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿಗಳ ವಕ್ತಾರರು ನೀಡಿರುವ ಮಾಹಿತಿಗಳ ಪ್ರಕಾರ, ಕೆಲ ಕೋರ್ಸ್ಗಳಿಂದ ಕಾಲೇಜುಗಳಿಗೆ ಸಮಸ್ಯೆಗಳುಂಟಾಗುತ್ತಿದ್ದು, ಈ ಕೋರ್ಸ್ಗಳಿಂದ ಕಾಲೇಜುಗಳಿಗೆ ಹೊರೆಯಾಗುತ್ತಿವೆ. ಆದುದರಿಂದಾಗಿ ಅಂತಹ ಕೋರ್ಸ್ಗಳನ್ನೇ ಸ್ಥಗಿತಗೊಳಿಸಲು ತೀರ್ಮಾನಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಇನ್ನು ಕೆಲ ಕಾಲೇಜುಗಳು ಸ್ನಾತಕೋತ್ತರ ಪದವಿಯ ಕೋರ್ಸ್ಗಳನ್ನೇ ಸ್ಥಗಿತಗೊಳಿಸಿವೆ. ಆರ್ವಿ ಎಂಜಿನಿಯರಿಂಗ್ ಕಾಲೇಜು ಡಿಜಿಟಲ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಎಂಜಿನಿಯರಿಂಗ್ ಸ್ನಾತಕೋತ್ತರ ಪದವಿ ಕೋರ್ಸ್ ಅನ್ನು ಸ್ಥಗಿತಗೊಳಿಸಿದೆ. ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರ್ಕಿಟೆಕ್ಚರ್ ಕೋರ್ಸ್ಅನ್ನು ಸ್ಥಗಿತಗೊಳಿಸಿದೆ. ಆಚಾರ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಎರಡು ಸ್ನಾತಕೋತ್ತರ ಪದವಿಯ ಕೋರ್ಸ್ಗಳನ್ನು ಸ್ಥಗಿತಗೊಳಿಸಿದೆ.
ದಯಾನಂದ ಸಾಗರ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಮಿಕಲ್ ಎಂಜಿನಿಯರಿಂಗ್, ಮಾಸ್ಟರ್ಸ್ ಇನ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಸೇರಿದಂತೆ ವಿವಿಧ ಕೋರ್ಸ್ಗಳನ್ನು ಸ್ಥಗಿತಗೊಳಿಸಿದೆ. ಶ್ರೀ ವೆಂಕಟೇಶ್ವರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಕೋರ್ಸ್ಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ನಗರದ ಉನ್ನತ ಮಟ್ಟದ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರೊಬ್ಬರು ಈ ಕುರಿತು ಪ್ರತಿಕ್ರಿಯಿಸಿದ್ದು, ಕೋರ್ಸ್ಗಳ ಕುರಿತ ಬೇಡಿಕೆಗಳು ಕಡಿಮೆಯಾಗಿದ್ದರಿಂದಾಗಿ ಈ ರೀತಿಯ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕಂಪ್ಯೂಟರ್ ಸೈನ್ಸ್ ಮತ್ತು ಎಲೆಕ್ಟ್ರಾನಿಕ್ಸ್ ಆ್ಯಂಡ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಕೋರ್ಸ್ಗಳನ್ನು ಕೆಲವರಷ್ಟೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ನೆರೆ ರಾಜ್ಯಗಳಲ್ಲಿ ಕಾಲೇಜುಗಳ ಸಂಖ್ಯೆ ಹೆಚ್ಚಾಗಿದ್ದರಿಂದಾಗಿ ಬೇಡಿಕೆಗಳು ಕಡಿಮೆಯಾಗಿವೆ ಎಂದು ತಿಳಿಸಿದ್ದಾರೆ.
ಉನ್ನತ ಕಾಲೇಜುಗಳೂ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳಲ್ಲಿ 180 ಸೀಟುಗಳನ್ನು ಭರ್ತಿ ಮಾಡಲು ಶ್ರಮ ಪಡುತ್ತಿವೆ. ಭಾರತದಲ್ಲಿಂದು ಎಂಜಿನಿಯರಿಂಗ್ ಕಾಲೇಜುಗಳು ನಾಯಿಕೊಡೆಗಳಂತೆ ತಲೆಯೆತ್ತುತ್ತಿರುವುದೇ ಇದಕ್ಕೆ ಕಾರಣ ಎಂದು ಮತ್ತೊಂದು ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ಅಭಿಪ್ರಾಯಿಸಿದ್ದಾರೆ.