ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ‘ಬಿಜೆಪಿ ಪಾತ್ರವಿಲ್ಲ’: ಜಗದೀಶ್ ಶೆಟ್ಟರ್
ಹುಬ್ಬಳ್ಳಿ, ಜೂ. 14: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಿಜೆಪಿಯ ಯಾವುದೇ ಪಾತ್ರವಿಲ್ಲ. ಈ ಪ್ರಕರಣದಲ್ಲಿ ನಿಜವಾದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗೌರಿ ಹತ್ಯೆ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಕೆಲವರನ್ನು ಬಂಧಿಸಿ ತನಿಖೆ ಕೈಗೊಂಡಿದ್ದು, ತಪ್ಪಿತಸ್ಥರನ್ನು ಪತ್ತೆ ಮಾಡಬೇಕಿದೆ. ತಪ್ಪು ಯಾರೇ ಮಾಡಿದ್ದರೂ ಅವರಿಗೆ ಶಿಕ್ಷೆಯಾಗಲಿ ಎಂದು ಆಗ್ರಹಿಸಿದರು.
ಲಿಂಗಾಯತ ಮತ್ತು ವೀರಶೈವ ಎರಡೂ ಒಂದೇ. ಹೀಗಿರುವಾಗ ಪ್ರತ್ಯೇಕ ಧರ್ಮದ ಮಾತೆಲ್ಲಿಂದ ಬರಬೇಕು. ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಹೋರಾಟ ಮಾಡಿದವರನ್ನು ವಿಧಾನಸಭಾ ಚುನಾವಣೆಯಲ್ಲಿ ಜನತೆ ಮನೆಗೆ ಕಳುಹಿಸಿದ್ದಾರೆ ಎಂದು ಶೆಟ್ಟರ್, ಪರೋಕ್ಷ ವಾಗ್ದಾಳಿ ನಡೆಸಿದರು.
ಪ್ರತ್ಯೇಕ ಧರ್ಮಕ್ಕಾಗಿ ಕಾನೂನು ಹೋರಾಟ ಮಾಡುತ್ತೇವೆ ಎನ್ನುತ್ತಿದ್ದಾರೆ. ಚುನಾವಣೆಗೂ ಮೊದಲೇ ಕಾನೂನು ಹೋರಾಟ ಮಾಡಬೇಕಿತ್ತು. ಚುನಾವಣೆಯಲ್ಲಿ ಪ್ರತ್ಯೇಕ ಧರ್ಮ ಎಂಬುದನ್ನು ಜನತೆ ನಂಬಲಿಲ್ಲ. ಸದ್ಯಕ್ಕೆ ಅವರು ಜನರ ಬಳಿಗೆ ಹೋಗುವುದಿಲ್ಲ. ಹೀಗಾಗಿ ಕಾನೂನು ಹೋರಾಟ ಎಂದು ಹೇಳುತ್ತಿದ್ದಾರೆ ಎಂದು ಟೀಕಿಸಿದರು.