ಶಿವಮೊಗ್ಗ: ಪ್ರತ್ಯೇಕ ರಸ್ತೆ ಅಪಘಾತ; ಇಬ್ಬರು ಮೃತ್ಯು
ಶಿವಮೊಗ್ಗ, ಜೂ. 21: ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಸನ್ನಿವಾಸ ಗ್ರಾಮದ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಕಾರೊಂದು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಗೋಪಾಲಕೃಷ್ಣ ಎಂಬವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ವಿಜೇತ ಹಾಗೂ ಪ್ರಶಾಂತ್ ಎಂಬವರು ಗಾಯಗೊಂಡಿದ್ದಾರೆ. ಈ ಕಾರು ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನುಗೋಡು ಗ್ರಾಮಕ್ಕೆ ತೆರಳುತ್ತಿತ್ತು ಎನ್ನಲಾಗಿದೆ.
ಮತ್ತೊಂದು ಘಟನೆಯಲ್ಲಿ ಹಾರ್ನಳ್ಳಿ ಬಳಿ ನಡೆದ ಅವಘಡದಲ್ಲಿ, ಬೈಕೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿ ನಡೆದುಕೊಂಡ ಹೋಗುತ್ತಿದ್ದ ವ್ಯಕ್ತಿಯೋರ್ವರಿಗೆ ಢಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಹಿಂಬದಿ ಕುಳಿತಿದ್ದ ನವೀನ್ ಎಂಬುವರು ಸ್ಥಳದಲ್ಲಿಯೇ ಅಸುನೀಗಿದ್ದಾರೆ. ಪಾದಚಾರಿ ಮಂಜು ಎಂಬವರು ಗಾಯಗೊಂಡಿದ್ದಾರೆ. ಬೈಕ್ ಚಾಲಕನ ಅಜಾಗರೂಕ, ನಿರ್ಲಕ್ಷ್ಯದ ಚಾಲನೆಯೇ ಅವಘಡಕ್ಕೆ ಕಾರಣವಾಗಿದೆ.