ಮಡಿಕೇರಿ: ಹುಲಿದಾಳಿಗೆ ಜಾನುವಾರು ಬಲಿ
ಮಡಿಕೇರಿ, ಜೂ.23: ವಿರಾಜಪೇಟೆಯ ಮಾಲ್ದಾರೆ ಬಳಿಯ ಕಾಫಿ ತೋಟದಲ್ಲಿ ವ್ಯಾಘ್ರನ ದಾಳಿಗೆ ಮತ್ತೊಂದು ಜಾನುವಾರು ಬಲಿಯಾಗಿದೆ. ಹಗಲಿನಲ್ಲೇ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿರುವ ಹುಲಿಯ ಸೆರೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಜೆಡಿಎಸ್ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಭೇಟಿ ನೀಡಿ ಅರಣ್ಯ ಇಲಾಖೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಇಲ್ಲಿಯವರೆಗೆ ಜಿಲ್ಲೆಯಲ್ಲಿ 35 ಕ್ಕೂ ಅಧಿಕ ಜಾನುವಾರುಗಳು ಹುಲಿದಾಳಿಗೆ ಬಲಿಯಾಗಿವೆ. ಆದರೆ ಅರಣ್ಯ ಇಲಾಖೆ ನಿದ್ರಾವಸ್ಥೆಯಲ್ಲಿದೆ ಎಂದು ಅವರು ಆರೋಪಿಸಿದರು.
ಕೊಡಗನ್ನು ಕಾಡುತ್ತಿರುವ ವನ್ಯಜೀವಿಗಳ ಬಗ್ಗೆ ಈಗಾಗಲೇ ಸರಕಾರಕ್ಕೆ ಮಾಹಿತಿ ನೀಡಿರುವುದಾಗಿ ತಿಳಿಸಿದ ಸಂಕೇತ್ ಪೂವಯ್ಯ ಅರಣ್ಯ ಇಲಾಖೆ ತಕ್ಷಣ ಕಾರ್ಯೋನ್ಮುಖವಾಗಬೇಕೆಂದು ಒತ್ತಾಯಿಸಿದರು.
ಘಟನೆ ನಡೆದ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಲಾಖೆ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಹುಲಿಯ ಚಲನವಲನ ಪತ್ತೆಯಾಗಿದ್ದು, ಸಧ್ಯದಲ್ಲಿಯೇ ಕಾರ್ಯಾಚರಣೆ ನಡೆಸಲಾಗುವುದೆಂದು ಅಧಿಕಾರಿಗಳು ತಿಳಿಸಿದ್ದಾರೆ.