ಹಾಸನಾಂಬ ಕಲಾಕ್ಷೇತ್ರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ
ಹಾಸನ,ಜೂ.27: ನಾಡಪ್ರಭು ಕೆಂಪೇಗೌಡರ ಆದರ್ಶದಲ್ಲಿ ಬದುಕಿದರೆ ನಾವು ಮಾದರಿಯಾಗಿ ಇರಬಹುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಹೆಚ್.ಡಿ. ರೇವಣ್ಣ ಕರೆ ನೀಡಿದರು.
ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬುಧವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ-2018 ನ್ನು ಜ್ಯೋತಿ ಬೆಳಗಿ ಉದ್ಘಾಟಿಸಿ ಮಾತನಾಡಿದ ಅವರು, ಬೆಂಗಳೂರು ಕಟ್ಟಿದ ಕೆಂಪೇಗೌಡರು ಕೇವಲ ಒಂದು ಸಮುದಾಯಕ್ಕೆ ನಿರ್ಮಿಸಲಿಲ್ಲ. ಎಲ್ಲಾ ವರ್ಗದವರಿಗೂ ಅನುಕೂಲವಾಗಲಿ ಎಂಬ ದೃಷ್ಠಿಯಲ್ಲಿ ಇಂತಹ ನಾಡನ್ನು ಕಟ್ಟಿದ್ದಾರೆ ಎಂದರು. ಅವರ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿಯಬೇಕು ಎಂದು ಹೇಳಿದರು.
ಕ್ಷೇತ್ರದ ಶಾಸಕ ಪ್ರೀತಮ್ ಜೆ. ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾಡಪ್ರಭು ಕೆಂಪೇಗೌಡರಂತಹ ಮಹಾನೀಯರ ಜಯಂತಿಯನ್ನು ಕೇವಲ ಒಂದು ದಿನಕ್ಕೆ ಸೀಮಿತವಾಗಿಸದೇ ವಾರ್ಷಿಕ ಕಾರ್ಯಕ್ರಮವಾಗಿ ತಿಂಗಳಿಗೆ ಒಂದು ದಿನ ಗ್ರಾಮೀಣ ಪ್ರದೇಶದಲ್ಲಿರುವ ಜನತೆಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. 1931ರಲ್ಲೆ ಚಿಕ್ಕವಯಸ್ಸಿನಲ್ಲಿ ಬೆಂಗಳೂರು ನಂತಹ ಮಹಾನಗರಕ್ಕೆ ಮುಂದಾದರು. ಅವರು ಒಬ್ಬ ದಕ್ಷತೆಗೆ ಹೆಸರಾದವರು. ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿ ಕೆರೆ ನಿರ್ಮಾಣ ಮಾಡಿದರು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆಯುಳ್ಳ ಕಿರು ಪುಸ್ತಕವನ್ನು ಬಿಡುಗಡೆ ಮಾಡಲಾಯಿತು. ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಇದೆ ವೇಳೆ ನೆರವೇರಿಸಿದರು. ಸಭಾ ಕಾರ್ಯಕ್ರಮಕ್ಕೆ ಮೊದಲು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಕೆಂಪೇಗೌಡರ ಭಾವಚಿತ್ರ ಹಾಗೂ ವಿವಿಧ ಕಲಾತಂಡದೊಡನೆ ಕಲಾಭವನದವರೆಗೂ ಮೆರವಣಿಗೆ ಜರುಗಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಅಪರ ಜಿಲ್ಲಾಧಿಕಾರಿ ಪೂರ್ಣಿಮ, ಜಿಲ್ಲಾ ಒಕ್ಕಲಿಗರ ಸಂಘದ ಜಿ.ಎಲ್. ಮುದ್ದೇಗೌಡ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್, ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಂ. ಶಿವಣ್ಣ, ನಿವೃತ್ತ ಉಪನ್ಯಾಸಕ ಸುಂದರ್ ಇತರರು ಪಾಲ್ಗೊಂಡಿದ್ದರು. ಸಮಾಜ ಸೇವಕ ಆರ್.ಕೆ. ಸ್ವರೂಪ್ ನಿರೂಪಿಸಿದರು.