ಸಂಪೂರ್ಣ ಸಾಲಮನ್ನಾಕ್ಕೆ ಆಗ್ರಹಿಸಿ ರಾಮನಗರದಿಂದ ಬೆಂಗಳೂರಿಗೆ ಬಿಜೆಪಿ ಪಾದಯಾತ್ರೆ
ಬೆಂಗಳೂರು, ಜು. 25: ರೈತರ ಸಂಪೂರ್ಣ ಸಾಲಮನ್ನಾ ಸೇರಿದಂತೆ ರಾಜ್ಯದ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಆಗ್ರಹಿಸಿ ನಾಳೆ(ಜು.26)ಯಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿನಿಧಿಸುವ ರಾಮನಗರ ಜಿಲ್ಲೆಯಿಂದ ಬೆಂಗಳೂರಿಗೆ ಬಿಜೆಪಿ ಪಾದಯಾತ್ರೆ ಹಮ್ಮಿಕೊಂಡಿದೆ.
ಜು.26ರ ಬೆಳಗ್ಗೆ 10ಗಂಟೆಗೆ ರಾಮನಗರದ ಕೆಂಗಲ್ ದೇವಸ್ಥಾನದ ಬಳಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ, ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಪಾದಯಾತ್ರೆ ಉದ್ಘಾಟಿಸಲಿದ್ದಾರೆ.
ರೈತರ ಸಂಪೂರ್ಣ ಸಾಲಮನ್ನಾ, ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಸೇರಿ ರಾಜ್ಯದ ಸಮಸ್ಯೆಗಳಿಗೆ ರಾಜ್ಯ ಸರಕಾರ ಕೂಡಲೇ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಏರ್ಪಡಿಸಿರುವ ಪಾದಯಾತ್ರೆಯಲ್ಲಿ ಮೂರು ಸಾವಿರಕ್ಕೂ ಅಧಿಕ ಮಂದಿ ರೈತರು ಪಾಲ್ಗೊಳ್ಳಲಿದ್ದಾರೆಂದು ಪ್ರಕಟಣೆ ತಿಳಿಸಿದೆ.
Next Story