ಉತ್ತರ ಕರ್ನಾಟಕ ಅಭಿವೃದ್ಧಿ ಬಗೆಗಿನ ಚರ್ಚೆಗೆ ಸಿದ್ಧ: ಮಾಜಿ ಸಿಎಂ ಜಗದೀಶ್ ಶೆಟ್ಟರ್
ಹುಬ್ಬಳ್ಳಿ, ಜು. 29: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದಂತೆ ಬಹಿರಂಗ ಚರ್ಚೆಗೆ ತಾನು ಸಿದ್ಧ. ಈ ಸಂಬಂಧ ಸರಕಾರ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಇಂದಿಲ್ಲಿ ಆಗ್ರಹಿಸಿದ್ದಾರೆ.
ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತಂತೆ ಮಾಜಿ ಶಾಸಕ ವೈಎಸ್ವಿ ದತ್ತ ಬಿಡುಗಡೆ ಮಾಡಿರುವ ಪುಸ್ತಕ ತನಗೆ ತಲುಪಿಲ್ಲ. ಅದು ಬಂದ ನಂತರ ಪ್ರತಿಕ್ರಿಯೆ ನೀಡುವೆ ಎಂದು ಹೇಳಿದರು.
ಉತ್ತರ ಕರ್ನಾಟಕಕ್ಕೆ ಹಳೇ ಮೈಸೂರು ಭಾಗದವರು ಏನೇನು ಕೊಡುಗೆ ನೀಡಿದ್ದಾರೆ ಎಂಬ ಬಗ್ಗೆಯೂ ಶ್ವೇತಪತ್ರ ಹೊರಡಿಸಲಿ ಎಂದ ಅವರು, ಸಿಎಂ ಕುಮಾರಸ್ವಾಮಿ ಅವರು ನೀಡಿದ ಹೇಳಿಕೆ ಪ್ರತ್ಯೇಕತೆ ಕೂಗಿಗೆ ಅವಕಾಶ ಮಾಡಿಕೊಟ್ಟಿದೆ. ಕೂಗು ಇನ್ನಷ್ಟು ಬಲಗೊಳ್ಳುವ ಮುನ್ನ ಸರಕಾರ ಎಚ್ಚೆತ್ತುಕೊಳ್ಳಬೇಕೆಂದು ಸಲಹೆ ಮಾಡಿದರು.
ಉತ್ತರ ಕರ್ನಾಟಕ ಭಾಗದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಅನ್ಯಾಯ ಆಗಿರುವುದನ್ನು ಹಲವು ಬಾರಿ ಬಿಜೆಪಿ ನಾಯಕರು ಪ್ರಸ್ತಾಪಿಸಿದ್ದಾರೆ. ಯಾವ ಯಾವ ಯೋಜನೆಗೆ ಎಷ್ಟೆಷ್ಟು ಅನುದಾನ ಒದಗಿಸಲಾಗಿದೆ ಎಂಬುದರ ಬಗ್ಗೆ ಚರ್ಚೆ ಆಗಬೇಕು ಎಂದು ಶೆಟ್ಟರ್ ಸಲಹೆ ಮಾಡಿದರು.