ಮಾಜಿ ಸಚಿವ ತಿಪ್ಪೇಸ್ವಾಮಿ ನಿಧನ
ಚಿತ್ರದುರ್ಗ, ಆ.8: ಮಾಜಿ ಸಚಿವ, ಚಳ್ಳಕೆರೆಯ ಮಾಜಿ ಶಾಸಕ ತಿಪ್ಪೇಸ್ವಾಮಿ ಇಂದು ಬೆಳಗ್ಗೆ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೊಲಂಬಿಯಾ ಏಶಿಯಾ ಆಸ್ಪತ್ರೆಗೆ ದಾಖಲಾಗಿದ್ದ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಎಚ್.ಡಿ.ದೇವೇಗೌಡ ನೇತೃತ್ವದ ಸರಕಾರದಲ್ಲಿ ಅಬಕಾರಿ ಹಾಗೂ ಜೆ.ಎಚ್.ಪಟೇಲ್ ನೇತೃತ್ವದ ಸರಕಾರದಲ್ಲಿ ನೀರಾವರಿ ಸಚಿವರಾಗಿದ್ದ ತಿಪ್ಪೇಸ್ವಾಮಿ ಅವರು, 1985ರಲ್ಲಿ ಮೊದಲ ಬಾರಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.
ತಮ್ಮ ಅಧಿಕಾರವಧಿಯಲ್ಲಿ ವಾಲ್ಮೀಕಿ ಸಮುದಾಯವನ್ನು ಸಂಘಟಿಸಿದ್ದ ತಿಪ್ಪೇಸ್ವಾಮಿಯವರ ನಾಲ್ಕು ದಶಕಗಳ ರಾಜಕೀಯ ಹೋರಾಟ, ಸಮುದಾಯಕ್ಕೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ 2017ರಲ್ಲಿ ರಾಜ್ಯ ಸರಕಾರ ಅವರಿಗೆ ರಾಜ್ಯ ಮಟ್ಟದ ‘ಮಹರ್ಷಿ ವಾಲ್ಮೀಕಿ ಪ್ರಶಸ್ತಿ’ ನೀಡಿ ಪುರಸ್ಕರಿಸಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಓರ್ವೆ ಪುತ್ರಿ ಸಹಿತ ಅಪಾರ ಬಂಧುಮಿತ್ರರು, ಅಭಿಮಾನಿಗಳನ್ನು ಅಗಲಿದ್ದಾರೆ.
Next Story