ಮಂಡ್ಯ: ರೌಡಿ ಮೇಲೆ ಮಾರಣಾಂತಿಕ ಹಲ್ಲೆ
ಮಂಡ್ಯ, ಆ.11: ಬೆಂಗಳೂರಿನ ಕುಖ್ಯಾತ ರೌಡಿ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ.ಹೊಸೂರು ಬಳಿ ಶನಿವಾರ ಸಂಜೆ ನಡೆದಿದೆ.
ಬೆಂಗಳೂರಿನ ಅರಸಯ್ಯ ದುಷ್ಕರ್ಮಿಗಳಿಂದ ಗಂಭೀರವಾಗಿ ಹಲ್ಲೆಗೊಳಗಾಗಿರುವ ವ್ಯಕ್ತಿಯಾಗಿದ್ದು, ಈತ ರಿಯಲ್ ಎಸ್ಟೇಟ್ ಉದ್ಯಮಿ, ಕುಖ್ಯಾತ ರೌಡಿ ಎನ್ನಲಾಗಿದೆ.
ಭೀಮನ ಅಮಾವಾಸ್ಯೆ ಪ್ರಯುಕ್ತ ಈತ ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಮಹಾಕಾಳಿ ದೇವಸ್ಥಾನಕ್ಕೆ ಆಗಮಿಸಿದ್ದ ಎಂದು ತಿಳಿದು ಬಂದಿದೆ.
ಅರಸಯ್ಯ ಪೂಜೆ ಸಲ್ಲಿಸಿ ಹೊರಬಂದ ಸಂದರ್ಭದಲ್ಲಿ ಸುಮಾರು 10 ಮಂದಿ ದಾಳಿ ನಡೆಸಿ ಹಲ್ಲೆ ನಡೆಸಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಆತನನ್ನು ಸ್ಥಳೀಯರು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಅರಸಯ್ಯನ ಮೇಲೆ ಹಲ್ಲೆ ಮಾಡಿದವರು ಯಾರು ಎಂಬುದು ತಿಳಿದು ಬಂದಿಲ್ಲ. ಆದರೆ, ರೌಡಿ ಹಿನ್ನಲೆಯ ದ್ವೇಷ ಅಥವಾ ರಿಯಲ್ ಎಸ್ಟೇಟ್ ವ್ಯವಹಾರದ ಶಂಕೆ ವ್ಯಕ್ತವಾಗಿದೆ. ಹಲ್ಲೆ ಮಾಡಿದವರು ಸಹ ಬೆಂಗಳೂರಿಗರೇ ಎಂದು ತಿಳಿದು ಬಂದಿದೆ.
ಶ್ರೀರಂಗಪಟ್ಟಣದ ಗ್ರಾಮಾಂತರ ಪೊಲೀಸರು ಪ್ರಕರಣ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.