ಬಿಜೆಪಿ ನಾಯಕರು ಕೇಂದ್ರ ಸರಕಾರವನ್ನು ಪ್ರಶ್ನಿಸಲಿ: ಸಚಿವ ಡಿ.ಕೆ.ಶಿವಕುಮಾರ್
ಲಕ್ನೋಗೆ ಏರ್ ಶೋ ಸ್ಥಳಾಂತರ ವಿಚಾರ
ಹುಬ್ಬಳ್ಳಿ, ಆ. 12: ಬೆಂಗಳೂರಿನಲ್ಲಿ ನಡೆಯುತ್ತಿದ್ದ ಏರ್ ಶೋವನ್ನು ಉತ್ತರ ಲಕ್ನೋಗೆ ಸ್ಥಳಾಂತರ ಮಾಡಿರುವ ಕ್ರಮ ಸರಿಯಲ್ಲ. ಈ ಬಗ್ಗೆ ಬಿಜೆಪಿ ನಾಯಕರು ಕೇಂದ್ರ ಸರಕಾರವನ್ನು ಪ್ರಶ್ನಿಸಬೇಕೆಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
ರವಿವಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಏರ್ ಶೋ ಸ್ಥಳಾಂತರ ಮಾಡದಂತೆ ಇತ್ತೀಚೆಗೆ ಸಿಎಂ ಕುಮಾರಸ್ವಾಮಿ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದರು. ಆದರೂ, ಏರ್ ಶೋ ಸ್ಥಳಾಂತರ ಮಾಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕೇಂದ್ರ ಸಚಿವರಾದ ಸದಾನಂದಗೌಡ, ಅನಂತಕುಮಾರ್, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕರ್ನಾಟಕ ರಾಜ್ಯಕ್ಕೆ ಮಾಡಿರುವ ಅನ್ಯಾಯದ ಬಗ್ಗೆ ಪ್ರಶ್ನಿಸಬೇಕು. ಕೇಂದ್ರಕ್ಕೆ ನಿಯೋಗ ಕೊಂಡೊಯ್ದು ಏರ್ ಶೋ ಬೆಂಗಳೂರಿಗೆ ವಾಪಸ್ ತರಬೇಕು ಎಂದು ಸವಾಲು ಹಾಕಿದರು.
ಮಹದಾಯಿ ನದಿ ನೀರು ಹಂಚಿಕೆ ವಿವಾದ ನ್ಯಾಯಾಧೀಕರಣದ ಹೈತೀರ್ಪು ಹಿನ್ನೆಲೆಯಲ್ಲಿ ನೀರಾವರಿ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ತೀರ್ಪು ನಮ್ಮ ಪರವಾಗಿ ಬರಲಿದೆ ಎಂಬ ಆಶಾಭಾವನೆ ಹೊಂದಿದ್ದೇವೆ ಎಂದು ಶಿವಕುಮಾರ್ ಇದೇ ವೇಳೇ ಭರವಸೆ ವ್ಯಕ್ತಪಡಿಸಿದರು.