ಚಿಕ್ಕಮಗಳೂರು ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಸಿಎಂಗೆ ಮನವಿ
ಚಿಕ್ಕಮಗಳೂರು, ಆ.26: ಜಿಲ್ಲೆಯಲ್ಲಿ ಕಳೆದ 2 ತಿಂಗಳಿನಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಸಾವಿರಾರು ಕೋಟಿ ರೂ. ಬೆಲೆಬಾಳುವ ಸಾರ್ವಜನಿಕ ಆಸ್ತಿ-ಪಾಸ್ತಿಗಳು ನಾಶಗೊಂಡಿವೆ. ಜಿಲ್ಲೆಯ ಪ್ರಮುಖ ಬೆಳೆಗಳಾದ ಕಾಫಿ, ಕಾಳು ಮೆಣಸು, ಅಡಿಕೆ, ಏಲಕ್ಕಿ, ಬಾಳೆ, ಭತ್ತದ ಬೆಳೆಗಳು ಸಂಪೂರ್ಣವಾಗಿ ನಾಶಗೊಂಡಿದ್ದು, ಜಿಲ್ಲೆಯನ್ನು ಅತಿವೃಷ್ಟಿ ಪೀಡಿತ ಪ್ರದೇಶವೆಂದು ಘೋಷಣೆ ಮಾಡುವುದರೊಂದಿಗೆ ಕೂಡಲೇ 500 ಕೋಟಿ ರೂ. ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕೆಂದು ವಿದಾನ ಪರಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಸಿ.ಎಂ ಗೆ ಮನವಿ ಸಲ್ಲಿಸಿದ್ದಾರೆ.
ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ನ.ರಾ.ಪುರ ಹಾಗೂ ಶೃಂಗೇರಿ ತಾಲೂಕುಗಳಲ್ಲಿ ಭದ್ರ, ತುಂಗಾ ಹಾಗೂ ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ಬಹಳಷ್ಟು ಪ್ರದೇಶಗಳು ಜಲಾವೃತಗೊಂಡಿದೆ. ಹೀಗಾಗಿ ಈ 5 ತಾಲೂಕುಗಳನ್ನು ಅತೀವೃಷ್ಠಿ ಪ್ರದೇಶವೆಂದು ಘೋಷಿಸಿ ಜಿಲ್ಲೆಗೆ ಕನಿಷ್ಠ 500 ಕೋಟಿ ರೂ. ವಿಶೇಷ ಪ್ಯಾಕೇಜ್ನ್ನು ಮಂಜೂರು ಮಾಡುವ ಮೂಲಕ ಜಿಲ್ಲೆಯಲ್ಲಿ ಹಾನಿಗೊಂಡಿರುವ ಸಾರ್ವಜನಿಕ ಆಸ್ತಿ-ಪಾಸ್ತಿಗಳನ್ನು ಪುನರ್ ನಿರ್ಮಾಣ ಮಾಡಲು ಹಾಗೂ ಆಸ್ತಿ - ಪಾಸ್ತಿ ಹಾನಿಗೊಳಗಾದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಪರಿಹಾರ ನೀಡುವ ಮೂಲಕ ಚಿಕ್ಕಮಗಳೂರು ಜಿಲ್ಲೆಯ ಜನತೆಯ ಬೆಂಬಲಕ್ಕೆ ಸರಕಾರ ನಿಲ್ಲಬೇಕೆಂದು ಪ್ರಾಣೇಶ್ ಮನವಿಯಲ್ಲಿ ಸಿಎಂ ಅವರನ್ನು ಒತ್ತಾಯಿಸಿದ್ದಾರೆ.