ಮಡಿಕೇರಿ: ಬೆಲೆ ಏರಿಕೆ ಖಂಡಿಸಿ ಸೆ.10 ರಂದು ಜೆಡಿಎಸ್ ಪ್ರತಿಭಟನೆ
ಮಡಿಕೇರಿ, ಸೆ.9 :ತೈಲೋತ್ಪನ್ನಗಳು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿರುವ ಜಾತ್ಯತೀತ ಜನತಾದಳದ ಕೊಡಗು ಜಿಲ್ಲಾ ಮುಖಂಡ ಕೆ.ಎಂ.ಗಣೇಶ್, ಸೆ.10 ರಂದು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಗುವುದೆಂದು ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು ಕೇಂದ್ರದ ವಿರುದ್ಧ ರಾಷ್ಟ್ರವ್ಯಾಪಿ ಬಂದ್ ಆಚರಿಸಲಾಗುತ್ತಿದೆ, ಆದರೆ ಕೊಡಗು ಜಿಲ್ಲೆ ಅತಿವೃಷ್ಟಿಯಿಂದ ನಲುಗಿ ಹೋಗಿರುವುದರಿಂದ ಬಂದ್ ನಿರ್ಧಾರವನ್ನು ಕೈಬಿಟ್ಟು ಪ್ರತಿಭಟನೆ ನಡೆಸುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ಕೇಂದ್ರದ ಜನ ವಿರೋಧಿ ನೀತಿಯನ್ನು ಖಂಡಿಸಿ ಬಂದ್ನಂತಹ ಹೋರಾಟ ಅನಿವಾರ್ಯವಾಗಿದ್ದರೂ ಜಿಲ್ಲೆಯ ಸಂತ್ರಸ್ತರಿಗೆ ಪರಿಹಾರ ಸಾಮಾಗ್ರಿಗಳನ್ನು ವಿತರಿಸುವ ಸಂದರ್ಭ ಯಾವುದೇ ರೀತಿಯಲ್ಲಿ ಅಡಚಣೆಗಳಾಗಬಾರದು ಎನ್ನುವ ಕಾರಣಕ್ಕಾಗಿ ಬಂದ್ ನಿರ್ಧಾರ ಕೈಬಿಡಲಾಗಿದೆ. ಸೋಮವಾರ ಬೆಳಗ್ಗೆ 11.30 ಕ್ಕೆ ಜೆಡಿಎಸ್ ಮೂಲಕ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿರುವ ಗಣೇಶ್ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.