ರಾಜ್ಯ ಸಂಪುಟ ವಿಸ್ತರಣೆ ಸದ್ಯಕ್ಕೆ ದೂರ ..!
ಬೆಂಗಳೂರು, ಸೆ.13: ರಾಜ್ಯದಲ್ಲಿ ಮೈತ್ರಿ ಸರಕಾರಕ್ಕೆ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಸದ್ಯಕ್ಕೆ ದೂರವಾಗುವ ಎಲ್ಲ ಸೂಚನೆ ಕಂಡು ಬಂದಿದೆ.
ಸಮನ್ವಯ ಸಮಿತಿಯ ನಿರ್ಧಾರದಂತೆ ಸೆಪ್ಟಂಬರ್ ಮೂರನೇ ವಾರದಲ್ಲಿ ಸಚಿವ ಸಂಪುಟದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಚಿವರ ನೇಮಕವಾಗಬೇಕಿತ್ತು. ಆದರೆ ಬದಲಾದ ಪರಿಸ್ಥಿತಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕವನ್ನು ಮುಂದೂಡಲು ಹೈಕಮಾಂಡ್ ನಿರ್ಧರಿಸಿದೆ.
6 ಸಚಿವ ಸ್ಥಾನ ಮತ್ತು 20 ನಿಗಮ ಮಂಡಳಿಗಳ ಹುದ್ದೆ ಖಾಲಿ ಇದೆ. ಹಲವು ಮಂದಿ ಶಾಸಕರು ಕಣ್ಣಿಟ್ಟಿದ್ದಾರೆ. ಒಂದು ವೇಳೆ ದೋಸ್ತಿ ಸರಕಾರ ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡುವ ನಿಟ್ಟಿನಲ್ಲಿ ಗಮನ ಹರಿಸಿದರೆ ಸರಕಾರಕ್ಕೆ ಹೊಸ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಈ ಕಾರಣದಿಂದಾಗಿ ಲೋಕಸಭೆ ಚುನಾವಣೆ ಮುಗಿಯುವ ತನಕ ಸಚಿವ ಸಂಪುಟ ವಿಸ್ತರಣೆ ಇಲ್ಲ ಎಂದು ತಿಳಿದು ಬಂದಿದೆ.
ಜೆಡಿಎಸ್ ನಲ್ಲಿ ಯಾವುದೇ ಸಮಸ್ಯೆ ಇಲ್ಲ. ಆದರೆ ಸಮ್ಮಿಶ್ರ ಸರಕಾರದ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್ ನಲ್ಲಿ ಒಳಜಗಳ ಇದೆ. ಜಾರಕಿಹೊಳಿ ಸಹೋದರರು ಅನಗತ್ಯವಾಗಿ ಗೊಂದಲ ಸೃಷ್ಟಿಸಿದ್ದಾರೆ. ಈ ಬೆಳವಣಿಗೆಯ ಬಗ್ಗೆ ಕಣ್ಣಿಟ್ಟು ಕಾಯುತ್ತಿರುವ ವಿಪಕ್ಷ ಬಿಜೆಪಿ ಆಪರೇಶನ್ ಕಮಲಕ್ಕೆ ಚಿಂತನೆ ನಡೆಸಿದೆ. ಅತೃಪ್ತ ಕಾಂಗ್ರೆಸ್ ಶಾಸಕರನ್ನು ತನ್ನತ್ತ ಸೆಳೆಯುವ ಪ್ರಯತ್ನಕ್ಕೆ ಮುಂದಾಗಿರುವುದು ಬಹಿರಂಗಗೊಂಡಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಹೈಕಮಾಂಡ್ ಸಮ್ಮಿಶ್ರ ಸರಕಾರಕ್ಕೆ ಎದುರಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಗಮನ ಹರಿಸಿದೆ ಎನ್ನಲಾಗಿದೆ.
ಜಾರಕಿಹೊಳಿ ಸಹೋದರರ ವರ್ತನೆಯ ಬಗ್ಗೆ ಮುಖ್ಯ ಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಬೇಸರ ವ್ಯಕ್ತಪಡಿಸಿ ಉಪ ಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ ಅವರಿಗೆ ಸಮಸ್ಯೆಯನ್ನು ಬಗೆಹರಿಸಲು ಸೂಚಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರು ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರಲ್ಲಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಯ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. " ನಿಮಗೆ ಮೈತ್ರಿಯನ್ನು ನಿಭಾಯಿಸುವುದು ಕಷ್ಟವಾಗಿದ್ದರೆ ಸ್ಪಷ್ಟವಾಗಿ ಹೇಳಿಬಿಡಿ " ಎಂದು ಗೌಡರು ಗುಡುಗಿದ್ದಾರೆ ''ಎಂದು ಮೂಲಗಳು ತಿಳಿಸಿವೆ.