ವಿಕಲಚೇತನ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿ: ವಿಕಲಚೇತನರ ಅಧಿನಿಯಮ ರಾಜ್ಯ ಆಯುಕ್ತ ವಿ.ಎಸ್.ಬಸವರಾಜು ಸೂಚನೆ
ಮಡಿಕೇರಿ, ಸೆ.19: ವಿಕಲಚೇತನ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ವಿಕಲಚೇತನರ ಅಧಿನಿಯಮ ರಾಜ್ಯ ಆಯುಕ್ತ ವಿ.ಎಸ್.ಬಸವರಾಜು ಅವರು ತಿಳಿಸಿದ್ದಾರೆ.
ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಅಧಿಕಾರಿಗಳು ಹಾಗೂ ಪುನರ್ವಸತಿ ಕಾರ್ಯಕರ್ತರ ಜೊತೆ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಂಕಷ್ಟಕ್ಕೆ ತುತ್ತಾದ ವಿಕಲಚೇತನರಿಗೆ ಯಾವುದೇ ರೀತಿ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು. ವಿಕಲಚೇತನ ಮಕ್ಕಳಿಗೆ ಶಿಕ್ಷಣ, ಆರೋಗ್ಯ ಕಲ್ಪಿಸಬೇಕು, ಜೊತೆಗೆ ವಿಕಲಚೇತನರಿಗೆ ಸ್ವ ಉದ್ಯೋಗ ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ವಿ.ಎಸ್.ಬಸವರಾಜು ಹೇಳಿದರು.
ಸರ್ಕಾರ ವಿಕಲಚೇತನ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಾಗೂ ಹಿರಿಯ ನಾಗರಿಕರಿಗೆ ಪಿಂಚಣಿ ಸೌಲಭ್ಯವನ್ನು ನೀಡುತ್ತಿದ್ದು, ಇವುಗಳನ್ನು ಬಳಸಿಕೊಳ್ಳಬೇಕು. ಪ್ರಮಾಣ ಪತ್ರಗಳನ್ನು ಪಡೆಯುವಂತಾಗಲು ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡುವಂತಾಗಬೇಕು. ವಿಕಲಚೇತನ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು. ಎಸ್ಎಸ್ಎಲ್ಸಿ ಮೇಲ್ಪಟ್ಟು ಉನ್ನತ ವ್ಯಾಸಂಗ ಮಾಡುವಂತಾಗಲು ಸಲಹೆ ಮಾರ್ಗದರ್ಶನ ನೀಡುವಂತಾಗಬೇಕು ಎಂದರು. ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣಧಿಕಾರಿ ದೇವರಾಜು ಅವರು ಪರಿಹಾರ ಕೇಂದ್ರಗಳಲ್ಲಿ ಸುಮಾರು 69 ವಿಕಲಚೇತನರು ಇದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ರಾಜೇಶ್ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬರಿಗೂ ಉಚಿತ ಆರೋಗ್ಯ ಸೇವೆ ಕಲ್ಪಿಸಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಇಲ್ಲದಿದ್ದಲ್ಲಿ ಬೇರೆ ಕಡೆಯಿಂದ ತರಿಸಿ ಉಚಿತವಾಗಿ ಆರೋಗ್ಯ ಸೇವೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಸ್ವಸ್ಥ ಸಂಸ್ಥೆಯ ಮುರಿಗೇಶ್, 'ವಿಕಲಚೇತನರು ಆಸ್ಪತ್ರೆಗೆ ತೆರಳಿ ಗುರುತಿನ ಚೀಟಿ ಪಡೆಯುವುದು ಕಷ್ಟ ಸಾಧ್ಯವಾಗುತ್ತದೆ. ಆದ್ದರಿಂದ ಹೋಬಳಿ ಮಟ್ಟದಲ್ಲಿ ವಿಕಲಚೇತನರಿಗೆ ಪ್ರಮಾಣ ಪತ್ರ ನೀಡುವ ಶಿಬಿರ ಏರ್ಪಡಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು. ವಿಕಲಚೇತನರಿಗೆ ಆದಾಯ ಪ್ರಮಾಣ ಪತ್ರದಲ್ಲಿ ವಿನಾಯಿತಿ ನೀಡುವಂತಾಗಬೇಕು ಎಂದು ವಿಕಲಚೇತನರೊಬ್ಬರು ಮನವಿ ಮಾಡಿದರು. ಸ್ವಸ್ಥ ಸಂಸ್ಥೆಯ ಆರತಿ ಸೋಮಯ್ಯ ಅವರು ಹಲವು ಸಲಹೆ ನೀಡಿದರು.
ವಿಕಲಚೇತನರ ಅಧಿನಿಯಮದ ಉಪ ಆಯುಕ್ತ ಪದ್ಮನಾಭ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮಲ್ಲೇಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಾಲ್ಟರ್ ಡಿಮೆಲ್ಲೊ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ವಿವಿದ್ದೋದ್ಧೇಶ ಪುನರ್ವಸತಿ ಕಾರ್ಯಕರ್ತರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇತರರು ಹಾಜರಿದ್ದರು.