ವಿಶ್ವವಿಖ್ಯಾತ ಮೈಸೂರು ದಸರಾಗೆ ಬುಧವಾರ ಅಧಿಕೃತ ಚಾಲನೆ
ಸಾಂದರ್ಭಿಕ ಚಿತ್ರ
ಮೈಸೂರು,ಅ.8: ವಿಶ್ವವಿಖ್ಯಾತ ಮೈಸೂರು ದಸರಾ-2018 ಗೆ ಚಾಮುಂಡಿ ಬೆಟ್ಟದಲ್ಲಿ ಅ.10 ರ ಬುಧವಾರ ಅಧಿಕೃತವಾಗಿ ಚಾಲನೆ ದೊರೆಯಲಿದೆ.
ಈ ಬಾರಿಯ ದಸರಾ ಉದ್ಘಾಟನೆಯನ್ನು ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ನಾರಾಯಣಮೂರ್ತಿ ನೆರವೇರಿಸಲಿದ್ದಾರೆ. ಬುಧವಾರ ಬೆಳಿಗ್ಗೆ 7.05 ರಿಂದ 07.35 ರ ವರೆಗೆ ಸಲ್ಲುವ ತುಲಾ ಲಗ್ನದಲ್ಲಿ ದಸರಾ ಮಹೋತ್ಸವವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಸಲಾಗುತ್ತದೆ.
ಚಾಮುಂಡಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವವನ್ನು ಸುಧಾನಾರಾಯಣ ಮೂರ್ತಿ ಉದ್ಘಾಟಿಸಲಿದ್ದಾರೆ.
ದಸರಾ ಉದ್ಘಾಟನೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಉನ್ನತ ಶಿಕ್ಷಣ ಸಚಿವ ಹಾಗೂ ಮೈಸೂರು ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋಧ್ಯಮ ಸಚಿವ ಸಾ.ರಾ.ಮಹೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗ ಶೆಟ್ಟಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್, ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲ, ಮುಜರಾಯಿ ಸಚಿವ ರಾಜಶೇಖರ್ ಬಸವರಾಜ್ ಪಾಟೀಲ್ ಸೇರಿದಂತೆ ಸಚಿವ ಸಂಪುಟದ ಹಲವಾರು ಸಚಿವರುಗಳು ಪಾಲ್ಗೊಳ್ಳಲಿದ್ದಾರೆ.