ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧೆ: ದಿನೇಶ್ ಗುಂಡೂರಾವ್ ಸ್ಪಷ್ಟಣೆ
ಲೋಕಸಭೆ ಉಪಚುನಾವಣೆ
ಬೆಂಗಳೂರು, ಅ. 11: ಶಿವಮೊಗ್ಗ ಲೋಕಸಭೆ ಉಪ ಚುನಾವಣೆಯ ಅಭ್ಯರ್ಥಿ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಸ್ಥಳೀಯವಾಗಿ ಕಾಂಗ್ರೆಸ್ ಬಲಿಷ್ಟವಾಗಿದ್ದು, ನಮ್ಮ ಪಕ್ಷದ ಅಭ್ಯರ್ಥಿಯೇ ಸ್ಪರ್ಧಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.
ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ವರ್ಸಸ್ ಕಾಂಗ್ರೆಸ್ ಪರಿಸ್ಥಿತಿ ಇದ್ದು, ಬಿಜೆಪಿಗೆ ನೇರ ಎದುರಾಳಿ ಕಾಂಗ್ರೆಸ್. ಹೀಗಾಗಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನ ಮಾಡಲಾಗಿದೆ ಎಂದರು.
ಎಚ್ಎಎಲ್ ಕೊಡುಗೆ ಬಗ್ಗೆ ಸಂವಾದ: ರಾಫೆಲ್ ಯುದ್ದ ವಿಮಾನ ಖರೀದಿ ಹಗರಣದ ಹಿನ್ನೆಲೆಯಲ್ಲಿ ಎಚ್ಎಎಲ್ ಸಂಸ್ಥೆ ಕೊಡುಗೆಯ ಬಗ್ಗೆ ಬೆಂಗಳೂರಿನಲ್ಲಿ ಅ.13ಕ್ಕೆ ಸಂವಾದ ಕಾರ್ಯಕ್ರಮ ಆಯೋಜಿಸಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಎಚ್ಎಎಲ್ ಸಂಸ್ಥೆ ಆವರಣದಲ್ಲಿ ನಾವು ಯಾವುದೇ ಕಾರ್ಯಕ್ರಮ ನಡೆಸುತ್ತಿಲ್ಲ. ಎಚ್ಎಎಲ್ನಲ್ಲಿ ಕಾರ್ಯಕ್ರಮ ಮಾಡುತ್ತೇವೆಂದು ಹೇಳಿಲ್ಲ ಎಂದು ಸ್ಪಷ್ಟಣೆ ನೀಡಿದ ಅವರು, ಎಚ್ಎಎಲ್ ಸಂಸ್ಥೆ ಕೊಡುಗೆಯ ಬಗ್ಗೆ ನಗರದ ಕಬ್ಬನ್ಪಾರ್ಕ್ ಬಳಿಕ ಸಂವಾದ ಏರ್ಪಡಿಸಿದ್ದೇವೆ. ಈ ಕಾರ್ಯಕ್ರಮದಲ್ಲಿ ಎಚ್ಎಎಲ್ ಸಿಬ್ಬಂದಿ ಸೇರಿ ಆಯ್ದ ಕೆಲವರು ಪಾಲ್ಗೊಳ್ಳಲಿದ್ದಾರೆ ಎಂದರು.