ಸ್ವಾಮೀಜಿಗಳು ರಾಜಕೀಯದಲ್ಲಿ ಹಸ್ತಕ್ಷೇಪ ಮಾಡಬಾರದು: ಸಚಿವ ಸಾ.ರಾ.ಮಹೇಶ್
ಮೈಸೂರು,ಅ.11: ಸ್ವಾಮೀಜಿಗಳು ಮಾರ್ಗದರ್ಶನ ನೀಡಬೇಕೆ ಹೊರತು ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್ ಕೋಡಿ ಮಠದ ಸ್ವಾಮೀಜಿಗಳ ವಿರುದ್ಧ ಹರಿಹಾಯ್ದರು.
ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿ, ಕೋಡಿ ಮಠದ ಸ್ವಾಮೀಜಿಗಳು ಇನ್ನೆರಡು ತಿಂಗಳಲ್ಲಿ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸ್ವಾಮೀಜಿಗಳ ಮೇಲೆ ಅಪಾರವಾದ ಗೌರವವಿದೆ. ಜಾತ್ಯತೀತವಾಗಿ, ಪಕ್ಷಾತೀತವಾಗಿ, ಇಡೀ ಸಮಾಜವನ್ನು ಮತ್ತು ದೇಶದ ಜನರನ್ನು ಸರಿದಾರಿ ಕೊಂಡೊಯ್ಯುವ ಕೆಲಸವನ್ನು ಅನೇಕ ಮಠಗಳು ಮಾಡುತ್ತಿವೆ. ಇತ್ತೀಚೆಗೆ ಕೆಲವು ಸ್ವಾಮೀಜಿಗಳು ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಬಿದ್ದುಹೋಗುತ್ತದೆ ಎಂದು ಹಲವು ಸ್ವಾಮೀಜಿಗಳು ಹೇಳಿದ್ದಾರೆ. ಅದೇ ರೀತಿ ಈ ಸ್ವಾಮೀಜಿಗಳು ಹೇಳಿದ್ದಾರೆ ಎಂದು ಕೊಂಡಿದ್ದೇನೆ. ಈಗಲೂ ಮಾಧ್ಯಮಗಳ ಮೂಲಕ ಮನವಿ ಮಾಡುತ್ತೇನೆ. ಸ್ವಾಮೀಜಿಗಳು ಮಾರ್ಗದರ್ಶನ ನೀಡಬೇಕೆ ಹೊರತು ರಾಜಕಾರಣ ಮಾಡಬಾರದು ಎಂದು ಮನವಿ ಮಾಡಿದರು.
ನಾವು ಸ್ವಾಮೀಜಿಗಳ ಎಲ್ಲಾ ಹೇಳಿಕೆಗಳನ್ನು ನಂಬುತ್ತೇವೆ. ಇಂತಹ ಸಂದರ್ಭಗಳಲ್ಲಿ ನೀಡುವ ಹೇಳಿಕೆಗಳನ್ನು ನಂಬುವುದಿಲ್ಲ. ಇಂತಹ ಹೇಳಿಕೆಗಳಿಂದ ಸ್ವಾಮೀಜಿಗಳ ಮೇಲೆ ಇದ್ದ ನಂಬಿಕೆಯನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಿದರು.