ಕುಡಿದ ಮತ್ತಿನಲ್ಲಿ ಪಾದಚಾರಿ ಮೇಲೆ ಕಾರು ಹರಿಸಿದ ಚಾಲಕ: ಮಹಿಳೆ ಮೃತ್ಯು, ಓರ್ವ ಗಂಭೀರ
ಚಿಕ್ಕಮಗಳೂರು, ಅ.14: ಕುಡಿದ ಮತ್ತಿನಲ್ಲಿ ಕಾರು ಚಾಲಕನೋರ್ವ ಪಾದಚಾರಿಗಳ ಮೇಲೆ ಕಾರು ಹರಿಸಿದ್ದರಿಂದ ಮಹಿಳೆಯೋರ್ವರು ಮೃತಪಟ್ಟಿದ್ದು, ವ್ಯಕ್ತಿಯೋರ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಇಂದಾವರ ಗ್ರಾಮದಲ್ಲಿ ಶನಿವಾರ ರಾತ್ರಿ ವರದಿಯಾಗಿದೆ.
ತಾಲೂಕು ವ್ಯಾಪ್ತಿಯ ಮಲ್ಲಂದೂರು ಗ್ರಾಮದ ರಸ್ತೆಯಲ್ಲಿ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಯದ್ವಾತದ್ವಾ ಕಾರು ಚಲಾಯಿಸಿ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಜನರ ಮೇಲೆ ಕಾರು ಚಲಾಯಿಸಿದ್ದಾನೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು, ಘಟನೆಯಲ್ಲಿ ಇಂದಾವರ ಗ್ರಾಮದ ವೇದಾವತಿ ಎಂಬ ಮಹಿಳೆ ಎಂಬವರು ತೀವ್ರವಾಗಿ ಗಾಯಗೊಂಡಿದ್ದರಿಂದ ಸ್ಥಳೀಯರು ಅವರನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರೆಂದು ತಿಳಿದು ಬಂದಿದೆ. ಘಟನೆಯಲ್ಲಿ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.
ಕುಡಿದ ಮತ್ತಿನಲ್ಲಿ ಪಾದಚಾರಿಗಳ ಮೇಲೆ ಕಾರು ಹರಿಸಿದ್ದ ವ್ಯಕ್ತಿ ಘಟನೆ ಬಳಿಕ ಕಾರು ನಿಲ್ಲಿಸದೇ ಪರಾರಿಯಾಗಿದ್ದು, ಈ ಕಾರು ಸಮೀಪದ ಗಾಳಿಪೇಟೆ ಎಂಬಲ್ಲಿ ಪಲ್ಟಿಯಾಗಿದೆ. ಈ ವೇಳೆ ಗ್ರಾಮಸ್ಥರು ಕಾರು ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರೆಂದು ತಿಳಿದು ಬಂದಿದೆ. ಘಟನೆ ಸಂಬಂದ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆಂದು ತಿಳಿದು ಬಂದಿದೆ.