ಮಂಡ್ಯ ಲೋಕಸಭಾ ಉಪಚುನಾವಣೆ: ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಮಂಡ್ಯ, ಅ.15: ಲೋಕಸಭಾ ಉಪಚುನಾವಣೆಗೆ ಕಣ ಸಿದ್ದವಾಗಿದ್ದು, ಸೋಮವಾರ ಜೆಡಿಎಸ್, ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿಯೊಬ್ಬರು ನಾಮಪತ್ರ ಸಲ್ಲಿಸಿದರು.
ಜೆಡಿಎಸ್ನಿಂದ ಎಲ್.ಆರ್.ಶಿವರಾಮೇಗೌಡ ಅವರು 4, ಭಾರತೀಯ ಜನತಾ ಪಕ್ಷದಿ ಡಾ. ಸಿದ್ದರಾಮಯ್ಯ ಅವರು 1 ನಾಮಪತ್ರ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ನವೀನ್ಕುಮಾರ್ ಅವರು 1 ನಾಮಪತ್ರ ಸಲ್ಲಿಸಿದ್ದಾರೆ.
ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಜತೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಎಲ್.ಆರ್.ಶಿವರಾಮೇಗೌಡ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಕೆ.ಜೆ.ಜಾರ್ಜ್, ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಶಾಸಕರಾದ ಸುರೇಶ್ಗೌಡ, ಕೆ.ಟಿ.ಶ್ರೀಕಂಠೇಗೌಡ, ಇತರ ಮುಖಂಡರು ಹಾಜರಿದ್ದರು.
ಇದಕ್ಕೂ ಮುನ್ನ ಆದಿಚುಂಚನಗಿರಿ ಕಾಲಭೈರವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಶಿವರಾಮೇಗೌಡ, ಮಂಡ್ಯದಲ್ಲಿ ಮಾಜಿ ಸಂಸದ ಡಾ.ಜಿ.ಮಾದೇಗೌಡ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಇದಲ್ಲದೆ, ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್.ಆತ್ಮಾನಂದ ಅವರನ್ನೂ ಭೇಟಿಯಾದ ಅವರು, ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದು, ಗೆಲುವಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಚಲುವರಾಯಸ್ವಾಮಿಯನ್ನೂ ಭೇಟಿಯಾಗುತ್ತೇನೆ: ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಮೇಗೌಡ, ಚಲುವರಾಯಸ್ವಾಮಿ ಸೇರಿದಂತೆ ಕಾಂಗ್ರೆಸ್ನ ಎಲ್ಲಾ ಮುಖಂಡರನ್ನೂ ಭೇಟಿಯಾಗಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ ಎಂದರು.
ಟಿಕೆಟ್ ಆಕಾಂಕ್ಷಿಯಾಗಿದ್ದ ಲಕ್ಷ್ಮಿ ಅಶ್ವಿನ್ಗೌಡ ನನ್ನ ಸಹೋದರಿಯಂತೆ. ಇಲ್ಲಿಗೂ ಆಹ್ವಾನಿಸಿದ್ದೆ. ನಾಳೆಯಿಂದ ಪ್ರಚಾರಕ್ಕೆ ಬರಲಿದ್ದಾರೆ. ಟಿಕೆಟ್ ಆಕಾಂಕ್ಷಿತರಿಗೆ ನೋವು ಆಗುವುದು ಸಹಜ. ಎಲ್ಲವನ್ನೂ ಸರಿ ಮಾಡುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.
ಮತ್ತೊಂದೆಡೆ ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಜತೆ ಆಗಮಿಸಿದ ಡಾ.ಸಿದ್ದರಾಮಯ್ಯ ಬಿಜೆಪಿ ಅಭ್ಯರ್ಥಿಯಾಗಿ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ನಾಗಣ್ಣಗೌಡ, ಮುಖಂಡರಾದ ಕೆ.ಎಸ್.ನಂಜುಂಡೇಗೌಡ, ಎಚ್.ಪಿ.ಮಹೇಶ್, ಇತರ ಮುಖಂಡರು ಸಿದ್ದರಾಮೇಗೌಡರ ರಾಜೀನಾಮೆ ಸಲ್ಲಿಕೆ ವೇಳೆ ಜತೆಯಲ್ಲಿದ್ದರು.
ಒಕ್ಕಲಿಗರ ವೇದಿಕೆ ಜಿಲ್ಲಾಧ್ಯಕ್ಷ ಜಿ.ಬಿ.ನವೀನ್ಕುಮಾರ್ ತನ್ನ ಹಲವು ಬೆಂಬಲಿಗರ ಜತೆ ಆಗಮಿಸಿದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಜನಪರ ವೇದಿಕೆ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ ಇತರ ಮುಖಂಡರು ಉಪಸ್ಥಿತರಿದ್ದರು.