ಉ.ಕ ಭಾಗಕ್ಕೆ ಸರಕಾರ ಕೈಗೊಂಡ ಕಾರ್ಯಗಳ ಕುರಿತು ಶ್ವೇತಪತ್ರ ಹೊರಡಿಸಲು ಸೂಚಿಸುತ್ತೇನೆ: ದೇವೇಗೌಡ
ಹುಬ್ಬಳ್ಳಿ, ನ.18: ಉತ್ತರ ಕರ್ನಾಟಕ ಭಾಗಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಏನೇನು ಮಾಡಿದ್ದಾರೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಲು ಸೂಚಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದೇಶದ ಪ್ರಧಾನಿಯಾಗಿ ಕೆಲಸ ಮಾಡಿದ್ದೇನೆ. ರೈತರ ಸಮಸ್ಯೆ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಮನೆಗೂ ಹೋಗಿ ಬಂದಿದ್ದೇನೆ. ಅವರೇಕೆ ಸಮಸ್ಯೆ ಬಗೆಹರಿಸಿಲ್ಲ. ಅದನ್ನ ಯಾಕೆ ಯಾರೂ ಪ್ರಶ್ನಿಸುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈಗಲೇ ಕಬ್ಬು ಬೆಳೆಗಾರರು ಹಾಗೂ ಸಕ್ಕರೆ ಕಾರ್ಖಾನೆ ಮಾಲಕರ ಸಭೆ ಕರೆಯಲಾಗಿದೆ. ಸಮಸ್ಯೆ ಆದಷ್ಟು ಬೇಗ ಬಗೆಹರಿಯಲಿದೆ. ನಾವು ಕೆಲಸ ಮಾಡುತ್ತಿದ್ದೇವೆ. ಆದರೆ, ಅತೀ ವೇಗವಾಗಿ ಕೆಲಸ ಮಾಡಲು ನಾವು ಯಂತ್ರಗಳಲ್ಲವೆಂದು ಅವರು ಹೇಳಿದರು.
ಸಚಿವ ಸ್ಥಾನ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲ. ತಿಂಗಳಾಂತ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಒಟ್ಟಾಗಿಯೇ ಲೋಕಸಭೆ ಚುನಾವಣೆಯನ್ನು ಎದುರಿಸುತ್ತೇವೆ. ಜಾತ್ಯತೀತ ವಿರೋಧಿಗಳನ್ನು ದೂರವಿಡಲು ಒಂದುಗೂಡಿದ್ದು, ಲೋಕಸಭೆ ಚುನಾವಣೆ ಬಗ್ಗೆ ನಾನು, ಸಿದ್ದರಾಮಯ್ಯ ಚರ್ಚಿಸುತ್ತೇವೆ ಎಂದು ಅವರು ತಿಳಿಸಿದರು.