ಸಚಿವ ಸಂಪುಟ ವಿಸ್ತರಣೆಯಾದರೆ ಒಳ್ಳೆಯದು: ಮಾಜಿ ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು, ನ. 23: ಮೈತ್ರಿ ಸರಕಾರದ ಸಂಪುಟ ವಿಸ್ತರಣೆ ಆಗದಿರುವುದು ಶಾಸಕರಲ್ಲಿ ಅಸಮಾಧಾನವಿದ್ದು, ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆಯಾದರೆ ಒಳ್ಳೆಯದು ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಇಂದಿಲ್ಲಿ ಆಗ್ರಹಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಶಾಸಕರ ಕ್ಷೇತ್ರಕ್ಕೆ 40 ಕೋಟಿ ರೂ.ಗಳಷ್ಟು ಅನುದಾನ ನೀಡಿದ್ದು, ಇದೀಗ ಕೇವಲ 10 ಕೋಟಿ ರೂ. ಗಳನ್ನಷ್ಟೇ ನೀಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಹಿನ್ನಡೆ ಆಗಿಲ್ಲ: ಸಚಿವ ಡಿ.ಕೆ.ಶಿವಕುಮಾರ್ ಬೆಳಗಾವಿ ಭೇಟಿ ನೀಡಿದ್ದರಿಂದ ನಮಗೆ ಯಾವುದೇ ಹಿನ್ನೆಡೆಯಾಗಿಲ್ಲ. ಡಿಕೆಶಿ ಬೇರೆ ಜಿಲ್ಲೆಗೆ ಭೇಟಿ ನೀಡುವುದು ಹೊಸದೇನಿಲ್ಲ. ಸಚಿವರಾಗಿದ್ದು ಅವರ ಸಹಜವಾಗಿ ರಾಜ್ಯ ಪ್ರವಾಸ ಕೈಗೊಳ್ಳುತ್ತಾರೆ ಎಂದು ಪರೋಕ್ಷವಾಗಿ ಸಮರ್ಥಿಸಿದರು.
ಸಚಿವ ಸ್ಥಾನದ ಆಕಾಂಕ್ಷಿ: ಸಂಪುಟ ವಿಸ್ತರಣೆ ಅವಧಿಯಲ್ಲಿ ನನಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ. ನಾನು ಸಚಿವ ಸ್ಥಾನದ ಆಕಾಂಕ್ಷಿ ಆಗಿರುವುದು ನಿಜ ಎಂದ ಸತೀಶ್ ಜಾರಕಿಹೊಳಿ, ರೈತರ ಬಾಕಿ ಪಾವತಿ ಸಂಬಂಧ ಸಕ್ಕರೆ ಕಾರ್ಖಾನೆಗಳ ಮಾಲಕರೊಂದಿಗೆ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಾನು ಪಾಲ್ಗೊಂಡಿದ್ದೇನೆ. ಆದರೆ, ಸಕ್ಕರೆ ಕಾರ್ಖಾನೆಗಳಿಗೂ ಸರಕಾರಕ್ಕೂ ಸಂಬಂಧವಿಲ್ಲ. ಸಮಸ್ಯೆ ಬಗೆಹರಿಸಲು ಕ್ರಮ ವಹಿಸುತ್ತೇವೆ ಎಂದರು.