ಶಿವಮೊಗ್ಗ: ಕೊಲೆ ಯತ್ನ ಪ್ರಕರಣದ ಆರೋಪಿಗೆ 12 ವರ್ಷ ಜೈಲು ಶಿಕ್ಷೆ
ಶಿವಮೊಗ್ಗ, ಡಿ. 12: ಕೊಲೆ ಯತ್ನ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದ ವ್ಯಕ್ತಿಗೆ 12 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಜಿಲ್ಲೆಯ ಸಾಗರ ಪಟ್ಟಣದ 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.
ಸೊರಬ ತಾಲೂಕಿನ ಗೆಂಡ್ಲಾ ಗ್ರಾಮದ ನಿವಾಸಿಯಾದ ಪ್ರವೀಣ್ ಶಿಕ್ಷೆಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ನ್ಯಾಯಾಧೀಶರಾದ ಎಂ.ಶೋಭಾರವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎ.ಜಿ.ನಾಯ್ಕ್ ರವರು ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ: 2017 ನೇ ಆಗಸ್ಟ್ 22 ರಂದು ಜಮೀನು ವಿವಾದಕ್ಕೆ ಸಂಬಂಧಿಸಿ ಪ್ರಸ್ತುತ ಶಿಕ್ಷೆಗೊಳಗಾದ ಪ್ರವೀಣನು, ಗೆಂಡ್ಲಾ ಗ್ರಾಮದ ಸಣ್ಣನಾಗಪ್ಪ ಹಾಗೂ ಮಲ್ಲೇಶಪ್ಪರವರ ಮೇಲೆ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ. ಜಗಳ ಬಿಡಿಸಲು ಬಂದ ಶಿವಾಜಿ ಎಂಬುವರ ಮೇಲೆಯೂ ಹಲ್ಲೆ ಮಾಡಿದ್ದ. ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು. ಪ್ರಕರಣದ ವಿಚಾರಣೆಯಲ್ಲಿ ಪ್ರವೀಣನ ಕೃತ್ಯ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಶಿಕ್ಷೆಯ ಜೊತೆಗೆ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.