ಶಿವಕುಮಾರ ಸ್ವಾಮೀಜಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ
ಶಿವಕುಮಾರ ಸ್ವಾಮೀಜಿ
ಸೋಮವಾರಪೇಟೆ,ಡಿ.13: ಶ್ರೀ ಶಿವಕುಮಾರ ಸ್ವಾಮೀಜಿ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವುದನ್ನು ಅಖಿಲಭಾರತ ವೀರಶೈವ ಮಹಾಸಭಾ ಹಾಗೂ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಖಂಡಿಸಿದ್ದು, ಆರೋಪಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದೆ.
ತ್ರಿವಿಧ ದಾಸೋಹಿ, ಶತಾಯುಷಿ ಶಿವಕುಮಾರ ಸ್ವಾಮೀಜಿಯವರು ಅನಾರೋಗ್ಯಕ್ಕೀಡಾಗಿ ಚೆನೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನಿಶ್ ಮಣಿಕಂಠ ಎಂಬಾತ ಫೇಸ್ಬುಕ್ನಲ್ಲಿ ಶ್ರೀಗಳ ಆರೋಗ್ಯ ಹಾಗೂ ಚಿಕಿತ್ಸೆಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕುವ ಮೂಲಕ ಶ್ರೀಗಳಿಗೆ ಅವಮಾನ ಮಾಡಿರುವುದು ಖಂಡನೀಯ. ಇದರ ಬಗ್ಗೆ ಮಡಿಕೇರಿ, ಶನಿವಾರಸಂತೆ, ಸೋಮವಾರಪೇಟೆ, ಕುಶಾಲನಗರ ಹಾಗೂ ಪಿರಿಯಾಪಟ್ಟಣ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ. ಆರೋಪಿಯನ್ನು ಕೂಡಲೇ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಅಖಿಲಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಡಿ.ಬಿ. ಧರ್ಮಪ್ಪ, ಪ್ರಧಾನ ಕಾರ್ಯದರ್ಶಿ ಜಿ.ಎಂ. ಕಾಂತರಾಜು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್, ಸೋಮವಾರಪೇಟೆ ತಾಲೂಕು ಘಟಕದ ಅಧ್ಯಕ್ಷ ಮಹದೇವಪ್ಪ, ವಿರಾಜಪೇಟೆ ತಾಲೂಕು ಘಟಕದ ಅಧ್ಯಕ್ಷ ಎಸ್.ಎಸ್. ಸುದೇಶ್, ವಿರಾಜಪೇಟೆ ವೀರಶೈವ ಮಹಾಸಭಾದ ಅಧ್ಯಕ್ಷ ಕೆ.ಎನ್. ಸಂದೀಪ್ ಆಗ್ರಹಿಸಿದ್ದಾರೆ.